ದೇವನಹಳ್ಳಿ: ಜಾಲಿಗೆ ಪಂಚಾಯಿತಿಯ ಹೆಗ್ಗನಹಳ್ಳಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವ್ಯಕ್ತಿತ್ವ ವಿಕಸನ, ಒತ್ತಡ ನಿರ್ವಹಣೆ, ಮಾನಸಿಕ ಆರೋಗ್ಯ ಕಾರ್ಯಾಗಾರ ನಡೆಯಿತು.
ಜಿಲ್ಲಾ ಪಂಚಾಯಿತಿ, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಭಾಗಿತ್ವದಲ್ಲಿ ಬುಧವಾರ ನಡೆದ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಜಿಲ್ಲೆಯ ನಾಲ್ಕು ತಾಲ್ಲೂಕು ಬೆಂಗಳೂರಿಗೆ ಹೊಂದಿಕೊಂಡಂತೆ ಇದ್ದು, ಇಲ್ಲಿ ಸಾಕಷ್ಟು ಒತ್ತಡಗಳ ನಡುವೆ ಅಧಿಕಾರಿಗಳು ಕೆಲಸ ಮಾಡುವ ಅನಿವಾರ್ಯತೆ ಇದೆ. ಕೆಲಸದೊಂದಿಗೆ ಆರೋಗ್ಯದತ್ತ ಗಮನ ಹರಿಸುವುದು ಅತ್ಯಾವಶ್ಯಕ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳ ಮೂಲಕ ರಾಜ್ಯ ಸರ್ಕಾರವೂ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡುತ್ತಿದೆ. ಈಗಾಗಲೇ ಬಾಪೂಜಿ ಸೇವಾ ಕೇಂದ್ರದ ಮೂಲಕ ವಿವಿಧ ಇಲಾಖೆಯ ಪ್ರಮಾಣ ಪತ್ರಗಳನ್ನು ಗ್ರಾಪಂ ಸಿಬ್ಬಂದಿ ವಿತರಣೆ ಮಾಡುವ ಅವಕಾಶ ಕಲ್ಪಿಸಿದ್ದೇವೆ. ಅಭಿವೃದ್ಧಿಯೊಂದಿಗೆ ಸರ್ಕಾರದ ಕಾರ್ಯಕ್ರಮವನ್ನು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸಕ್ಕೆ ಅಧಿಕಾರಿಗಳು ಮಾನಸಿಕವಾಗಿ ದೃಢರಾಗಿರುವುದು ಅತಿಮುಖ್ಯ ಎಂದು ತಿಳಿಸಿದರು.
ಜಿ.ಪಂ. ಸಿಇಒ ಅನುರಾಧ ಕೆ.ಎನ್, ಉಪಕಾರ್ಯದರ್ಶಿ ಬಿ.ಶಿವಕುಮಾರ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ, ಮುಖ್ಯ ಯೋಜನಾಧಿಕಾರಿ ಕೆ.ಕೆ.ರಾಮಕೃಷ್ಣಯ್ಯ, ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.