ವಿಜಯಪುರ: ಅಧಿಕಾರಿಗಳ ಪ್ರಾಮಾಣಿಕ ಕರ್ತವ್ಯ ನಿರ್ವಹಣೆಯಿಂದ ಮಾತ್ರವೇ ಸ್ವಾಸ್ತ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಕರ್ನಾಟಕ ಮಾದಿಗ ದಂಡೋರ ರಾಜ್ಯ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ತಿಳಿಸಿದರು.
ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಟಿ.ರಂಗಪ್ಪ ಅವರನ್ನು ಸನ್ಮಾನಿಸಿ ಮಾತನಾಡಿದರು.
ಉತ್ತಮ ಕರ್ತವ್ಯ ನಿರ್ವಹಣೆಗಾಗಿ ಸಿಕ್ಕಿರುವ ರಾಷ್ಟ್ರಪತಿ ಪ್ರಶಸ್ತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂದ ಗೌರವವಾಗಿದೆ. ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಜತೆಗೆ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಅವರು ಕರ್ತವ್ಯ ನಿರ್ವಹಿಸುತ್ತಿರುವುದು ಇತರ ಅಧಿಕಾರಿಗಳಿಗೂ ಆದರ್ಶವಾಗಬೇಕಾಗಿದೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲೂ ಕೂಡ ಜನರಿಗೆ ಕೊರೊನಾ ಜಾಗೃತಿ ಮೂಡಿಸುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದ ಕಾರಣ ಅವರನ್ನು ಕೊರೊನಾ ವಾರಿಯರ್ಸ್ ಎಂದು ಗುರ್ತಿಸಿದ್ದಾರೆ. ಎಂದರು.
ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕಾನೂನಿನಡಿ ಕರ್ತವ್ಯ ಲೋಪವಿಲ್ಲದೆ ಮಾಡುತ್ತಿದ್ದೇವೆ. ಇದಕ್ಕೆ ಎಲ್ಲ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಯುವಕ ಸಂಘಗಳು, ಇಲಾಖೆ ಸಿಬ್ಬಂದಿ ಪೂರ್ಣ ಪ್ರಮಾಣದ ಸಹಕಾರವೇ ಮುಖ್ಯ. ಅನೇಕ ಒತ್ತಡ ಸಮಯದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಆದರೂ, ಜಿಲ್ಲೆಯ ಜನರ ಸಹಕಾರ ತೃಪ್ತಿ ತಂದಿದೆ ಎಂದರು.
ಹಳ್ಳಿಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಜನರ ಸಹಭಾಗಿತ್ವ ಮುಖ್ಯವಾದ ಪಾತ್ರವಾಗಿದೆ. ಮುಂದೆಯೂ ಕೂಡ ಜನರ ಸಹಕಾರದಲ್ಲಿ ಇಲಾಖೆ ನೀಡುವ ಎಲ್ಲ ಜವಾಬ್ದಾರಿ ನಿಭಾಯಿಸುವುದಾಗಿ ಹೇಳಿದರು.
ಮಾದಿಗ ದಂಡೋರ ಮುಖಂಡರಾದ ಮುದುಗುರ್ಕಿ ಆಂಜಿನಪ್ಪ, ಹ್ಯಾಡ್ಯಾಳ ದೇವರಾಜ್, ಮುದುಗುರ್ಕಿ ಮೂರ್ತಿ, ಮಲ್ಲೇಪುರ ಕದಿರಪ್ಪ, ಅಣ್ಣೇಶ್ವರ ರಾಜೇಂದ್ರ, ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.