ದೇವನಹಳ್ಳಿ: ‘ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್ ಹೇಳಿದರು.
ಇಲ್ಲಿನ ಉಗನವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮತ್ತು 2019–20ನೇ ಸಾಲಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸ್ಥಳೀಯ ಜನಪದ ನೃತ್ಯ ಮತ್ತು ಗಾಯನ, ಚಿತ್ರಕಲೆ, ಪ್ರಬಂಧ, ಚರ್ಚಾಸ್ಪರ್ಧೆ, ಏಕಾಪಾತ್ರಾಭಿನಯ, ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳು ಅನೇಕ ಕಲಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳು ಪ್ರತಿಭಾ ಕಾರಂಜಿ ವ್ಯಾಪ್ತಿಯಲ್ಲಿ ಬರುವುದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಕಲಾಭಿರುಚಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಉತ್ತಮ ವೇದಿಕೆ’ ಎಂದು ಹೇಳಿದರು.
‘ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ, ಪೋಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ. ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ಮುಂಬಿಕೊಳ್ಳುವ ವೇದಿಕೆಯಾಗಿದೆ. ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದವರೆಗೆ ಸ್ಪರ್ಧೆ ಇರುವುದರಿಂದ ಶಾಲೆ ಶಿಕ್ಷಕರು ಉತ್ತಮ ತರಬೇತಿ ನೀಡಿ ಸಜ್ಜುಗೊಳಿಸಬೇಕು. ಸರ್ಕಾರ ಉಚಿತ ಸೈಕಲ್ ಸೇರಿದಂತೆ ಆನೇಕ ಯೋಜನೆಗಳನ್ನು ಜಾರಿ ಮಾಡಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಯತ್ನಿಸುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿದೇವಿ ಮಾತನಾಡಿ, ‘15 ವರ್ಷಗಳಿಂದ ಸರ್ಕಾರವು ಶಿಕ್ಷಣ ಇಲಾಖೆ ಮೂಲಕ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮೂಲಕ ಅವರ ಪ್ರತಿಭೆ ಗುರುತಿಸುತ್ತಿದೆ. ಇದರ ಮೂಲಕ ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ವೈಭವವನ್ನು ಇನ್ನಷ್ಟು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ. ಮನೋರಂಜನಾತ್ಮಕ ಕಾರ್ಯಕ್ರಮದಿಂದ ಶೈಕ್ಷಣಿಕ ಗುಣಮಟ್ಟದ ಫಲಿತಾಂಶಕ್ಕೂ ಸಹಕಾರಿಯಾಗಲಿದೆ’ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ನರಸಿಂಹಮೂರ್ತಿ, ಉಪಾಧ್ಯಕ್ಷೆ ಸರಸ್ವತಿ ಮಂಜುನಾಥ್, ಸದಸ್ಯರಾದ ಲಕ್ಷ್ಮಿಕಾಂತ್, ಮೂರ್ತಿ, ನಾರಾಯಣಸ್ವಾಮಿ, ಇಂದಿರಮ್ಮ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಎಂ.ಪಿ.ಸಿ.ಎಸ್ ಅಧ್ಯಕ್ಷ ಜಿ.ಕೃಷ್ಣಪ್ಪ, ಸಿ.ಆರ್.ಪಿಗಳಾದ ಮುನಿರಾಜು, ಗಜೇಂದ್ರ, ಇ.ಸಿ.ಒ ಮಂಜುನಾಥ್, ಶಿಕ್ಷಕರಾದ ಹರೀಶ್, ಪ್ರಜ್ವಲ್, ಮದ್ಧೂರಪ್ಪ, ಪುಪ್ಪ, ಜಗದಾಂಬ, ನೇತ್ರಾವತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.