ವಿಜಯಪುರ: ಪ್ರತಿಭಾ ಕಾರಂಜಿಯಲ್ಲಿ ಮಕ್ಕಳು ತಮ್ಮ ಅಗಾಧ ಪ್ರತಿಭೆಗಳನ್ನು ತೋರ್ಪಡಿಸಲು ಸಾಧ್ಯವಾಗುತ್ತದೆ. ಇಂತಹ ಅವಕಾಶಗಳನ್ನು ಕಳೆದುಕೊಳ್ಳಬಾರದು ಎಂದು ಹಾರೋಹಳ್ಳಿ ಮುಖ್ಯಶಿಕ್ಷಕಿ ಸುಜಾತಮ್ಮ ಹೇಳಿದರು.
ಹೋಬಳಿಯ ಬಿಜ್ಜವಾರದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹಾರೋಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಜೇತರಾದ ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಕಲೆ, ಸಾಹಿತ್ಯಕ್ಕೆ ಸಂಬಂಧಿಸಿದ ಅಪಾರ ಜ್ಞಾನ ಇದ್ದರೂ ಅದನ್ನು ತೋರ್ಪಡಿಸಲು ಸೂಕ್ತವಾದ ವೇದಿಕೆಗಳಿಲ್ಲದ ಕಾರಣ ಎಷ್ಟೋ ಪ್ರತಿಭೆಗಳು, ಎಲೆ ಮರೆಯ ಕಾಯಿಗಳಂತಾಗಿದ್ದಾರೆ. ಈ ವೇದಿಕೆಗಳು, ಸಾಕಷ್ಟು ಪ್ರತಿಭೆಗಳನ್ನು ಹೊರತರುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಿರ್ಮಲಮ್ಮ ಮಾತನಾಡಿ, ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಶಾಲೆ, ತಂದೆ ತಾಯಿಗಳಿಗೆ ಕೀರ್ತಿ ತರುವ ವ್ಯಕ್ತಿತ್ವಗಳನ್ನು ಬೆಳೆಸಿಕೊಳ್ಳಬೇಕು. ಅಂಜಿಕೆ, ಭಯ, ಹಿಂಜರಿಕೆಯನ್ನು ಮೈಗೂಡಿಸಿಕೊಂಡರೆ ಜೀವನದಲ್ಲಿ ಏನನ್ನೂ ಸಾಧಿಸಲಾಗುವುದಿಲ್ಲ. ಮಕ್ಕಳ ಸಾಧನೆಗೆ ಪೋಷಕರ ಬೆಂಬಲವೂ ಅಗತ್ಯವಾಗಿ ಬೇಕಾಗಿದೆ ಎಂದರು.
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾಗಿರುವ ಮಕ್ಕಳಿಗೆ ಪ್ರಶಸ್ತಿ ವಿತರಿಸಿದರು. ಶಾಲಾ ಸಿಬ್ಬಂದಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.