ADVERTISEMENT

ಗೋಶಾಲೆ ಸ್ಥಾಪನೆಗೆ ಅಗತ್ಯ ಸಿದ್ಧತೆ

ಕಂದುರೋಗ ನಿಯಂತ್ರಣ ಲಸಿಕಾ ಅಭಿಯಾನದ ಭಿತ್ತಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 3:48 IST
Last Updated 2 ಸೆಪ್ಟೆಂಬರ್ 2021, 3:48 IST
ಗೋಶಾಲೆ ಸ್ಥಾಪಿಸುವ ಕುರಿತ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್ ರಾಷ್ಟ್ರೀಯ ಕಂದುರೋಗ ನಿಯಂತ್ರಣ ಲಸಿಕಾ ಅಭಿಯಾನದ ಮಾಹಿತಿ ಕುರಿತ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು
ಗೋಶಾಲೆ ಸ್ಥಾಪಿಸುವ ಕುರಿತ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್ ರಾಷ್ಟ್ರೀಯ ಕಂದುರೋಗ ನಿಯಂತ್ರಣ ಲಸಿಕಾ ಅಭಿಯಾನದ ಮಾಹಿತಿ ಕುರಿತ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು   

ದೇವನಹಳ್ಳಿ:‘ಪ್ರತಿ ಜಿಲ್ಲೆಯಲ್ಲಿ ಸರ್ಕಾರದಿಂದ ನೂತನವಾಗಿ ಗೋಶಾಲೆ ಸ್ಥಾಪಿಸಲು ನಿರ್ಧರಿಸಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಗೋಶಾಲೆ ಸ್ಥಾಪನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ನಡೆದ ನೂತನವಾಗಿ ಗೋಶಾಲೆ ಸ್ಥಾಪಿಸುವ ಕುರಿತ ರೂಪರೇಷೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹೊಸ ಗೋಶಾಲೆ ಸ್ಥಾಪಿಸಲು ಅಥವಾ ಈಗಾಗಲೇ ಅಸ್ತಿತ್ವದಲ್ಲಿದ್ದು ಟ್ರಸ್ಟ್ ಮೂಲಕ ನಡೆಸುತ್ತಿರುವ ಗೋಶಾಲೆಗಳನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ 1.80 ಲಕ್ಷ ಜಾನುವಾರುಗಳಿವೆ. ಗೋಶಾಲೆಗಳು ಸರ್ಕಾರದ ಮಾರ್ಗಸೂಚಿ ಅನ್ವಯ ಗರಿಷ್ಠ ಒಂದು ಸಾವಿರದ ನಾಲ್ಕು ನೂರು ರಾಸುಗಳನ್ನು ಆರೈಕೆ ಮಾಡುವಷ್ಟು ಮೂಲಸೌಕರ್ಯ ಹೊಂದಿರಬೇಕು. ಜಿಲ್ಲೆಯಲ್ಲಿರುವ ಗೋಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಇತ್ತೀಚಿನ ದಿನಗಳಲ್ಲಿ ಜಾನುವಾರುಗಳಲ್ಲಿ ಕಂದುರೋಗ (ಬ್ರುಸೆಲ್ಲೊಸಿಸ್ ರೋಗ) ಹೆಚ್ಚಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದರಿಂದ ಜಿಲ್ಲೆಯಲ್ಲಿ ಈ ರೋಗದ ನಿಯಂತ್ರಣ ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ ಎಂದರು.

ಈ ಕುರಿತು ಗ್ರಾಮ ಪಂಚಾಯಿತಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಪಶುವೈದ್ಯ ಸೇವಾ ಚಿಕಿತ್ಸಾಲಯದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಪ್ರಾಣಿ ದಯಾ ಸಂಘಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಗೋಶಾಲೆಗಳು, ಪ್ರಾಣಿದಯಾ ಸಂಘದ ನಡುವೆ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸಲು ಜಿಲ್ಲಾ ಪ್ರಾಣಿದಯಾ ಸಂಘದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿರುವ ಒಬ್ಬ ಸ್ವಯಂ ಸೇವಕರನ್ನು ಗುರುತಿಸಬೇಕು. ಅವರನ್ನು ಪ್ರಾಣಿ ಕಲ್ಯಾಣಾಧಿಕಾರಿಯಾಗಿ ಆಯ್ಕೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಜಿ.ಎಂ. ನಾಗರಾಜ್, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಕಚೇರಿಯ ಮುಖ್ಯ ಆಡಳಿತಾಧಿಕಾರಿ ಡಾ.ಅನಿಲ್‌ಕುಮಾರ್, ದೊಡ್ಡಬಳ್ಳಾಪುರದ ಉಪ ವಲಯ ಅರಣ್ಯಾಧಿಕಾರಿ ಸುಬ್ಬಾರಾವ್, ಡಿಸಿಆರ್‌ಬಿ ಡಿವೈಎಸ್‌ಪಿ ದೀಪಕ್, ನೆಲಮಂಗಲದ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಿದ್ದಪ್ಪ, ಶ್ರೀಸ್ವರ್ಣಾಂಭ ವಿದ್ಯಾ ಗುರುಕುಲ ಗೋಶಾಲೆಯ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಜೀವದಯಾ ಗೋಶಾಲೆಯ ದೀಪಕ್ ಜೈನ್, ಓಂಕಾರ ಗೋಶಾಲೆಯ ಶಿವಯೋಗಿ, ರಾಷ್ಟ್ರೋತ್ಥಾನ ಗೋಶಾಲೆಯ ಸುನೀಲ್, ಗೋಕುಲ ಗೋಶಾಲೆಯ ಉಮೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.