ದೇವನಹಳ್ಳಿ: ಮೊದಲ ಬಾರಿಗೆ ದೇವನಹಳ್ಳಿ ನಗರದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ತಿಳಿಸಿದರು .
ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ‘ಜಿಲ್ಲಾಡಳಿತ ಭವನದಲ್ಲಿ ಈ ಹಿಂದೆ ಇಲಾಖಾವಾರು ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಮುಖ್ಯವಾಗಿ ಮಳೆ ನೀರು ಸಂಗ್ರಹ ವ್ಯವಸ್ಥೆ, ನೀಲಗಿರಿ ತೆರವುಗೊಳಿಸಿ ಅಂತರ್ಜಲ ಉಳಿಸಿ, ಜಲಮೂಲ ಸಂರಕ್ಷಣೆ ಕೆರೆ ಅಭಿವೃದ್ಧಿಗೆ ಸಹಕರಿಸಿ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ’ ಎಂದು ಹೇಳಿದರು.
‘ಜಿಲ್ಲಾಡಳಿತ ಭವನದಲ್ಲಿ ಕಳೆದ ವರ್ಷ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿತ್ತು. ಸಾರ್ವಜನಿಕರ ಭಾಗವಹಿಸುವಿಕೆ, ವಿದ್ಯಾರ್ಥಿಗಳ ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸ್ಥಳಾವಕಾಶ ಕಡಿಮೆ ಇರುವುದರಿಂದ ದೇವನಹಳ್ಳಿ ನಗರದಲ್ಲಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದರು.
‘ಜಲ ಶಕ್ತಿ ಅಭಿಯಾನದಡಿ ಜಲ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಜಲ ಸಂರಕ್ಷಣೆಗಾಗಿ ಶ್ರಮಿಸಿರುವ ಕೆರೆ ಅಭಿವೃದ್ಧಿ ಹರಿಕಾರರು ಮತ್ತು ಮಳೆ ನೀರು ಸಂಗ್ರಹಕ್ಕೆ ಜಾಗೃತಿ ಮೂಡಿಸಿರುವ ಅಧಿಕಾರಿಗಳು ಸೇರಿದಂತೆ ಜಲ ಸಂರಕ್ಷಣೆಗೆ ಕೈಜೋಡಿಸಿರುವವರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು’ ಎಂದು ಹೇಳಿದರು.
ಜಿಲ್ಲಾ ಮತ್ತು ದೇವನಹಳ್ಳಿ ತಾಲ್ಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚಿಸಲಾಗಿದೆ. ದೇವನಹಳ್ಳಿ ನಗರದ 16 ಶಾಲೆಗಳಿಂದ ಪಥಸಂಚಲನ ಮತ್ತು ಒಂಬತ್ತು ಸಾಂಸ್ಕೃತಿಕ ಕಾರ್ಯಕ್ರಮ, ಪೊಲೀಸರಿಂದ ಕವಾಯತು, ಎಲ್ಲ ಕಾರ್ಯಕ್ರಮಗಳು ನಿಗದಿತ ಅವಧಿಯಲ್ಲಿ ನಡೆಯಲಿವೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.