ಆನೇಕಲ್: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂಭಾಗ ‘ಜನಧ್ವನಿ’ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ಕೆ.ರಮೇಶ್ ಮಾತನಾಡಿ, ‘ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದ ದೇವರಾಜ ಅರಸು ಅವರ ಚಿಂತನೆಗಳಿಗೆ ತಿಲಾಂಜಲಿ ನೀಡಲಾಗಿದೆ. ಬಡವರಿಗೆ ಭೂಮಿ ಹಕ್ಕು
ದೊರೆಯಲಿ ಎಂಬ ಉದ್ದೇಶದಿಂದ ಜಾರಿಗೊಳಿಸಿದ್ದ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ರೈತರ ಜಮೀನು ಬಂಡವಾಳಶಾಹಿಗಳ ಪಾಲಾಗುವಂತೆ ಮಾಡಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನರು ಪರದಾಡುತ್ತಿದ್ದಾರೆ. ಕೊರೊನಾ ಮಹಾಮಾರಿ ಎಲ್ಲರನ್ನೂ ಕಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಕೊರೊನಾದಲ್ಲೂ ಹಣ ಮಾಡಲು ಮುಂದಾಗಿದೆ’ ಎಂದು ಆರೋಪಿಸಿದರು.
ಪ್ರಚಾರ ಸಮಿತಿ ತಾಲ್ಲೂಕು ಅಧ್ಯಕ್ಷ ದೊಡ್ಡಹಾಗಡೆ ಹರೀಶ್ ಮಾತನಾಡಿ, ‘ಕೊರೊನಾ ಸಂಕಷ್ಟದ ಸಮಯದಲ್ಲಿ ವೆಂಟಿಲೇಟರ್, ಮಾಸ್ಕ್, ಪಿಇಪಿ ಕಿಟ್, ಸ್ಯಾನಿಟೈಸರ್ ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ’ ಎಂದು ಆರೋಪಿಸಿದರು.
ಕೊರೊನಾ ಸಂದರ್ಭದಲ್ಲಿ ನಡೆದಿರುವ ಖರೀದಿ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದರು.
ಪಟ್ಟಣದ ದೇವರಕೊಂಡಪ್ಪ ವೃತ್ತದಲ್ಲಿ ರಾಜೀವ್ಗಾಂಧಿ ಮತ್ತು ದೇವರಾಜ ಅರಸು ಅವರ
ಜನ್ಮದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ
ಸಲ್ಲಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜಣ್ಣ, ಚಂದ್ರಪ್ಪ, ಟೌನ್ ಕಾಂಗ್ರೆಸ್ ಅಧ್ಯಕ್ಷ ಜಿ.ಗೋಪಾಲ್, ಪುರಸಭಾ ಸದಸ್ಯರಾದ ಮುನಾವರ್, ಕೃಷ್ಣ, ಮುಖಂಡರಾದ ಇಂಡ್ಲವಾಡಿ ನಾಗರಾಜು, ಬಿ.ಪಿ.ರಮೇಶ್, ಲಿಂಗಪ್ಪ, ಸ್ವಾತೇಗೌಡ, ಆರ್.ಕೆ.ಕೇಶವರೆಡ್ಡಿ, ಶೇಷಾದ್ರಪ್ಪ, ಬಾಬು, ಶಿವಪ್ಪ, ಮನೋಹರ್, ಶೈಲೇಂದ್ರಕುಮಾರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.