ದೇವನಹಳ್ಳಿ: ಉತ್ತರ ಪ್ರದೇಶದ ಹಾಥರಸ್ ಎಂಬಲ್ಲಿ ನಡೆದ ಘಟನೆಯನ್ನು ಖಂಡಿಸಿ ತಾಲ್ಲೂಕು ವಾಲ್ಮೀಕಿ ನಾಯಕ ಸಂಘದ ಕಾರ್ಯಕರ್ತರು ಇಲ್ಲಿನ ತಾಲ್ಲೂಕು ಆಡಳಿತ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ವಾಲ್ಮೀಕಿ ನಾಯಕ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಡೇರಿ ನಾಗೇಶ್ ಮಾತನಾಡಿ, ‘ಹಾಥರಸ್ ಘಟನೆಗೆ ಸಂಬಂಧಿಸಿದಂತೆ ಯುವತಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂತ್ರಸ್ತ ಕುಟುಂಬಕ್ಕೆ ಸಿಮಿತವಾಗದೆ ದೇಶದ ದಲಿತರ, ಶೋಷಿತರ, ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಭವಿಷ್ಯದ ಮೇಲೆ ಕರಿ ನೆರಳು ಚಾಚಿದೆ. ಬಡತನ, ಅನಕ್ಷರತೆ, ಅರ್ಥಿಕ ಸಂಕಷ್ಟ
ಅನುಭವಿಸುತ್ತಿರುವ ಕುಟುಂಬಗಳು ಈ ಪ್ರಕರಣದಿಂದ ಮನೆಯಿಂದ ಹೊರಬರಲು ಭಯ ಪಡುತ್ತಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕಡಿವಾಣ ಬೀಳುವ ಸಾಧ್ಯತೆ ಇದೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗಳು ನೀರು ಕುಡಿದಷ್ಟೆ ಸುಲಭವಾಗಿ ನಡೆಯುತ್ತಿವೆ ಎಂದರೆ ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕಿದೆ’ ಎಂಬುದು ಪ್ರಶ್ನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ಕಾರ್ಯದರ್ಶಿ ರಾಮಚಂದ್ರಪ್ಪ, ಮುಖಂಡರಾದ ಯರ್ತಿಗಾನಹಳ್ಳಿ ಶಿವಣ್ಣ, ಎನ್.ಮುನಿರಾಜು, ಶಾಮಣ್ಣ, ನಾಗರಾಜು, ಲಕ್ಷಿಕಾಂತ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.