
ವಿಜಯಪುರ (ದೇವನಹಳ್ಳಿ): ಇಲ್ಲಿನ ಪುರಸಭೆ ಆವರಣದಲ್ಲಿ ಶುಕ್ರವಾರ ಪುರಸಭೆ ಮತ್ತು ಆರೋಗ್ಯ ಇಲಾಖೆಯಿಂದ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭ ಅಧ್ಯಕ್ಷೆ ಭವ್ಯ ಮಹೇಶ್, ಪಟ್ಟಣದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಬೇಕು. ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು. ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪೌರಕಾರ್ಮಿಕರು ತಮ್ಮ ವೃತ್ತಿಯನ್ನು ಮಕ್ಕಳಿಗೂ ಮುಂದುವರೆಸದೆ ಅವರನ್ನು ವಿದ್ಯಾವಂತರನ್ನಾಗಿ ಮಾಡಿ, ವೃತ್ತಿಯ ಬಗ್ಗೆ ಕೀಳಿರಿಮೆ ಬೇಡ. ಯಾವುದೇ ವೃತ್ತಿಯನ್ನು ಗೌರವಿಸಬೇಕು ಎಂದರು.
ಪಟ್ಟಣದ ಜನತೆ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಮನೆಯಲ್ಲಿಯೇ ಹಸಿಕಸ, ಒಣಕಸವನ್ನು ಬೇರ್ಪಡಿಸಿ ಮನೆ ಬಳಿ ಬರುವ ಪುರಸಭೆ ವಾಹನಕ್ಕೆ ನೀಡಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ತಿಳಿಸಿದರು.
ಪೌರಕಾರ್ಮಿಕರು ಕೆಲಸದ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಪುರಸಭೆ ಸದಸ್ಯ ನಂದಕುಮಾರ್ ತಿಳಿಸಿದರು.
ಶಿಬಿರದಲ್ಲಿ 100ಕ್ಕೂ ಹೆಚ್ಚು ಪೌರಕಾರ್ಮಿಕ ಕುಟುಂಬದವರು ತಪಾಸಣೆಗೆ ಒಳಗಾದರು.
ಪುರಸಭೆ ಆರೋಗ್ಯ ಅಧಿಕಾರಿ ಲಾವಣ್ಯ, ವೈದ್ಯರಾದ ಡಾ.ರಾಜು, ಡಾ.ಭೀಮರಾವ್, ಡಾ.ರಾಕೇಶ್, ಡಾ.ವರ್ಷಿಣಿ, ಸುಮಾ, ಅಶ್ವಿನಿ, ನಯನಾ, ಕಲಾವತಿ, ವೀಣಾ, ದುರ್ಗ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.