ಕುಂದಾಣ(ದೇವನಹಳ್ಳಿ): ಕಳೆದ ಒಂದು ವಾರದಿಂದ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ರೈತರ ಬೆಳೆಗಳು ನಾಶವಾಗಿವೆ. ಮನೆಗಳಿಗೆ ಅಪಾರ ಹಾನಿಯಾಗಿದೆ. ಅನ್ನದಾತರನ್ನು ರಕ್ಷಿಸಲು ತ್ವರಿತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್. ವೀರಣ್ಣ ಒತ್ತಾಯಿಸಿದರು.
ತಾಲ್ಲೂಕಿನ ಬೀರಸಂದ್ರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ‘ದಶಕಗಳಿಂದ ಕಾಣದಂತಹ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಟಾವಿಗೆ ಬಂದಿದ್ದ ದ್ರಾಕ್ಷಿ, ಕ್ಯಾರೆಟ್, ಬಿಟ್ರೋಟ್, ಬದನೆ, ತೊಂಡೆ, ಹುರಳಿ, ಹೂ ಬೆಳೆ ಮಳೆ ನೀರಿನಿಂದ ಜಲಾವೃತಗೊಂಡು ಹಾಳಾಗಿದೆ’ ಎಂದರು.
ದೇವನಹಳ್ಳಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳ ಸೇತುವೆಗಳು ಅವೈಜ್ಞಾನಿಕವಾಗಿವೆ. ಅವುಗಳ ತುಂಬ ನೀರು ತುಂಬಿಕೊಂಡು ಸಾಕಷ್ಟು ಗ್ರಾಮದ ನಿವಾಸಿಗಳು ಜಲದಿಗ್ಬಂಧನದಲ್ಲಿ ಇದ್ದಾರೆ. ಶಾಲಾ ಮಕ್ಕಳು, ಸಾರ್ವಜನಿಕರಿಗೆ ಸಂಪರ್ಕ ಸೇತು ಕಡಿದುಕೊಂಡಂತಾಗಿದೆ. ಅನೇಕ ಮನೆಗಳಿಗೆ ಅಪಾರ ಹಾನಿಯಾಗಿದೆ. ಸ್ಥಳ ಪರಿಶೀಲನೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಜನರ ಕಷ್ಟಗಳಿಗೆ ತುರ್ತಾಗಿ ಸಹಾಯ ಮಾಡಲು ಕೃಷಿ, ತೋಟಗಾರಿಕೆ, ತಾಲ್ಲೂಕು ಪಂಚಾಯಿತಿ, ರೈಲ್ವೆ ಇಲಾಖೆ, ಗ್ರಾ.ಪಂ., ಪುರಸಭೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.