ದೊಡ್ಡಬಳ್ಳಾಪುರ: ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಬಿಜೆಪಿ ಮುಖಂಡರು ಹಾಗೂ ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಪ್ರಚೋದನಕಾರಿ ಮಾತುಗಳನ್ನು ಹೇಳಿರುವ ಪ್ರೀತಂ ಗೌಡ ವಿರುದ್ಧ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಜೆಡಿಎಸ್ ಯುವ ಘಟಕದ ತಾಲ್ಲೂಕು ಅಧ್ಯಕ್ಷ ಎಚ್.ಮಂಜುನಾಥ್ ಆಗ್ರಹಿಸಿದರು.
ಗುರುವಾರ ನಗರದ ಬಸವ ಭವನ ಸಮೀಪದ ಜೆಡಿಎಸ್ ಕಚೇರಿಯಿಂದ ತಾಲ್ಲೂಕು ಕಚೇರಿವರೆಗೆ ಶಾಸಕ ಪ್ರೀತಂ ಗೌಡ ಅಣಕು ಶವಯಾತ್ರೆ ನಡೆಸಿದರು.
ಬಿಜೆಪಿ ಮುಖಂಡರು ಆಡಿಯೊ ಪ್ರಕರಣದ ತನಿಖೆ ದಿಕ್ಕು ತಪ್ಪಿಸಿಕೊಳ್ಳಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಬಿಜೆಪಿ ಮುಖಂಡರ ಅಸಹಾಯಕ ಸ್ಥಿತಿಯನ್ನು ತೋರಿಸುತ್ತದೆ. ಹಾಸನದಲ್ಲಿ ಜೆಡಿಎಸ್ ಪಕ್ಷದ ಮುಖಂಡರಿಗೆ ಕೆಟ್ಟ ಹೆಸರು ತರಲು ಹೊರಟಿರುವ ಶಾಸಕ ಪ್ರೀತಂ ಗೌಡ ಅವರ ಉದ್ದೇಶ ಈಡೇರುವುದಿಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಯುವ ಘಟಕದ ಸಾಸಲು ಹೋಬಳಿ ಅಧ್ಯಕ್ಷ ಜಿ.ಕೆ.ರಾಜ್ ಕುಮಾರ್, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ವಿನಯ್ ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಹನುಮಂತರಾಜು, ಯುವ ಮುಖಂಡರಾದ ರಾಮ್ ದಾಸ್, ಕೆಂಪರಾಜ್, ರಾಮಕೃಷ್ಣ, ಮನೋಹರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.