ADVERTISEMENT

ಹೆಚ್ಚುವರಿ ಆಧಾರ್ ಕೇಂದ್ರಕ್ಕೆ ಆಗ್ರಹ

ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 14:29 IST
Last Updated 13 ಫೆಬ್ರುವರಿ 2019, 14:29 IST
ಹೆಚ್ಚುವರಿಯಾಗಿ ಆಧಾರ್ ನೋಂದಣಿ ಕೇಂದ್ರ ಸ್ಥಾಪಿಸುವಂತೆ ಕರವೇ (ಪ್ರವೀಣ್ ಶೇಟ್ಟಿ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಹೆಚ್ಚುವರಿಯಾಗಿ ಆಧಾರ್ ನೋಂದಣಿ ಕೇಂದ್ರ ಸ್ಥಾಪಿಸುವಂತೆ ಕರವೇ (ಪ್ರವೀಣ್ ಶೇಟ್ಟಿ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ದೊಡ್ಡಬಳ್ಳಾಪುರ: ಹೆಚ್ಚುವರಿ ಆಧಾರ್ ನೋಂದಣಿ ಕೇಂದ್ರಗಳನ್ನು ತೆರೆಯುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಒತ್ತಾಯಿಸಿದರು.

ಸಾರ್ವಜನಿಕರಿಗೆ ಆಧಾರ್ ತಿದ್ದುಪಡಿ ಹಾಗೂ ಹೊಸದಾಗಿ ಆಧಾರ್ ನೋಂದಣಿಗೆ ನಿತ್ಯ ಸಮಸ್ಯೆ ಉಂಟಾಗುತ್ತಿರುವುದನ್ನು ತಪ್ಪಿಸುವಂತೆ ಒತ್ತಾಯಿಸಿ ಕರವೇ (ಪ್ರವೀಣ್ ಶೆಟ್ಟಿ) ಬಣದ ತಾಲ್ಲೂಕು ಘಟಕದ ವತಿಯಿಂದ ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ನಡೆದ ಪ್ರತಿಭಟನೆ ನಡೆಯಿತು.

ಮೂರು ಲಕ್ಷ ಜನಸಂಖ್ಯೆ ಹೊಂದಿರುವ ತಾಲ್ಲೂಕಿನಲ್ಲಿ ಕೇವಲ ಐದು ಆಧಾರ್ ನೋಂದಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಅಲ್ಲದೆ ಈ ನೋಂದಣಿ ಕೇಂದ್ರಗಳಲ್ಲಿ ದಿನಕ್ಕೆ 20 ರಿಂದ 30 ಟೊಕನ್ ವಿತರಿಸುತ್ತಿದ್ದು, ಟೋಕನ್ ಪಡೆಯಲು ನೋಂದಣಿ ಕೇಂದ್ರ ಮುಂದೆ ಮುಂಜಾನೆ 5 ಗಂಟೆಗೆ ಸಾಲು ನಿಲ್ಲಬೇಕಾದ ಅನಿರ್ವಾರ್ಯತೆ ಉಂಟಾಗಿದೆ. ಜನರ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್.ವೆಂಕಟೇಶ್ ಮಾತನಾಡಿ, ಸರ್ಕಾರದ ಯೋಜನೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದ್ದರೂ ಎಲ್ಲ ಯೋಜನೆಗಳಿಗೂ ಆಧಾರ್ ಕಡ್ಡಾಯವಾಗಿ ಪಡೆಯಲಾಗುತ್ತಿದೆ. ಇದರಿಂದ ಜನತೆ ಗೊಂದಲಕ್ಕೆ ಒಳಗಾಗಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ತೆರೆಯಲಾಗಿದ್ದರೂ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳನ್ನು ನೀಡಿ ಕಾರ್ಯನಿರ್ವಹಿಸುತ್ತಿಲ್ಲ. ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ತಿದ್ದುಪಡಿಗೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಗೌರವ ಅಧ್ಯಕ್ಷ ಪು.ಮಹೇಶ್, ನಗರ ಅಧ್ಯಕ್ಷ ಶ್ರೀನಗರ ಬಷೀರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು, ತಾಲ್ಲೂಕು ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ಖಚಾಂಚಿ ಆನಂದ್, ನಗರ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಹೇಮಂತ್, ಸದಸ್ಯರಾದ ಮಾರುತಿ, ಸೂರಿ, ಅಮೀದ್, ದಾದು, ಮುನಿ ಆಂಜನಪ್ಪ, ಬಾಲು, ಕಾರಹಳ್ಳಿ ಮಂಜುನಾಥ್ ಇದ್ದರು.

ಹೆಚ್ಚುವರಿ ಆಧಾರ್ ನೋಂದಣಿ ಕೇಂದ್ರಗಲನ್ನು ಸ್ಥಾಪಿಸುವಂತೆ ಘೋಷಣೆ ಕೂಗಿದ ಪ್ರತಿಭಟನಾ ನಿರತರು, ತಹಶೀಲ್ದಾರ್ ಎಂ.ಕೆ.ರಮೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.