ಹೊಸಕೋಟೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯು ಬಯಲು ಪ್ರದೇಶವಾಗಿವೆ. ಇಲ್ಲಿ ಮಳೆಯ ಪ್ರಮಾಣ ಕಡಿಮೆ. ಆದ್ದರಿಂದ ರೈತರು ನೀರಿಗಾಗಿ ಬಹಳ ಕಷ್ಟಪಡುತ್ತಿದ್ದು, ನೀರಾವರಿ ಸೌಲಭ್ಯ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಸಂಸದ ಬಿ.ಎನ್. ಬಚ್ಚೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರದೇಶದಲ್ಲಿ ಯಾವುದೇ ಶಾಶ್ವತ ನೀರಾವರಿ ಯೋಜನೆಗಳು ಇಲ್ಲ. ಇದರಿಂದ ಈ ಭಾಗದ ರೈತರು ಕೃಷಿ ಮಾಡಲು ಸಮಸ್ಯೆಯಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಯೋಜನೆ ರೂಪಿಸಬೇಕು ಎಂದರು.
‘ರಾಜ್ಯದ ಮೇಕೆದಾಟು, ಕಾವೇರಿ ನೀರು ನಿರ್ವಹಣೆ ಹಾಗೂ ಎತ್ತಿನಹೊಳೆ ಯೋಜನೆಗಳನ್ನು ಕೇಂದ್ರದ ಯೋಜನೆಗಳೆಂದು ಕೇಂದ್ರ ಸರ್ಕಾರ ಘೋಷಿಸುವಂತೆ ದೆಹಲಿಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಶಿಖಾವತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.
‘ಈ ಭಾಗದ ರೈತರ ಹಿತ ಕಾಪಾಡಬೇಕು ಎಂದು ಮನವಿ ಮಾಡಿದ್ದೇನೆ. ಇದೇ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.