ADVERTISEMENT

ಸರ್ಕಾರಿ ಆಸ್ಪತ್ರೆಗೆ ಸಿಬ್ಬಂದಿ ನೇಮಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಜುಲೈ 2019, 14:41 IST
Last Updated 20 ಜುಲೈ 2019, 14:41 IST
ಸಿಬ್ಬಂದಿ ನೇಮಿಸುವಂತೆ ಆಗ್ರಹಿಸಿ ಪಿವಿಸಿ ವತಿಯಿಂದ ಪ್ರತಿಭಟನೆ ನಡೆಯಿತು
ಸಿಬ್ಬಂದಿ ನೇಮಿಸುವಂತೆ ಆಗ್ರಹಿಸಿ ಪಿವಿಸಿ ವತಿಯಿಂದ ಪ್ರತಿಭಟನೆ ನಡೆಯಿತು   

ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ನೇಮಿಸುವಂತೆ ಪ್ರಜಾ ವಿಮೋಚನಾ ಚಳವಳಿ ಪಿವಿಸಿ ಸ್ವಾಭಿಮಾನ ರಾಜ್ಯ ಸಮಿತಿ ಅಧ್ಯಕ್ಷ ಮುನಿಆಂಜನಪ್ಪ ಒತ್ತಾಯಿಸಿದರು.

ಸಂಘಟನೆ ರಾಜ್ಯ ಸಮಿತಿ ತಾಲ್ಲೂಕು ಘಟಕದಿಂದ ಶನಿವಾರ ಆಸ್ಪತ್ರೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

100 ಹಾಸಿಗೆ ಇರುವ ಆಸ್ಪತ್ರೆಯಲ್ಲಿ ಸ್ತ್ರೀರೋಗ ಮತ್ತು ಮಕ್ಕಳ ತಜ್ಞರು ಸೇರಿದಂತೆ ಹಲವು ವೈದ್ಯರು ಹಾಗೂ ಸಿಬ್ಬಂದಿ ಹುದ್ದೆ ಖಾಲಿ ಉಳಿದಿದ್ದು ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗುತ್ತಿಲ್ಲ. ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶದಿಂದ ಮಹಿಳೆಯರು, ಗರ್ಭಿಣಿಯರು, ಕಾರ್ಮಿಕರು, ರೈತರು ಈ ಆಸ್ಪತ್ರೆಯನ್ನೇ ಆಶ್ರಯಿಸಿದ್ದಾರೆ. ಆದರೆ, ಸ್ಥಳೀಯವಾಗಿ ಆಯ್ಕೆಯಾಗಿ ಉನ್ನತ ಹುದ್ದೆ ಅಲಂಕರಿಸಿರುವ ಜನಪ್ರತಿನಿಧಿಗಳು ನಾಮಕಾವಸ್ತೆಗೆ ಪರೀಶೀಲನೆ ನಡೆಸುತ್ತಿದ್ದಾರೆ. ಇಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ಕ್ರಮಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ಹನುಮಣ್ಣಗೂಳ್ಯ ಮಾತನಾಡಿ, ಸರ್ಕಾರ ಆರೋಗ್ಯ ಯೋಜನೆ ಹೆಸರಲ್ಲಿ ಸಾವಿರಾರು ಕೋಟಿ ವೆಚ್ಚ ಮಾಡುತ್ತಿದೆ. ಆದರೆ, ಸಿಬ್ಬಂದಿ ಕೊರತೆಯಿಂದಾಗಿ ಬಡವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಈ ಕುರಿತಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಿವಿಸಿ ಸ್ವಾಭಿಮಾನ ರಾಜ್ಯ ಸಮಿತಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಕೊನಘಟ್ಟ ಬೈರಪ್ಪ, ವಿಭಾಗೀಯ ಕಾರ್ಯದರ್ಶಿ ಮುನಿರಾಜ್, ತಾಲ್ಲೂಕು ಅಧ್ಯಕ್ಷ ಮದ್ದೂರಪ್ಪ, ನಗರ ಅಧ್ಯಕ್ಷ ಸಿ.ಮಂಜುನಾಥ್, ಗೌರವ ಅಧ್ಯಕ್ಷ ಮುನಿರಾಜು, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ನಾಗರಾಜ್, ಬಿಬಿಎಂಪಿ ಅಧ್ಯಕ್ಷ ನಾರಾಯಣಪ್ಪ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಲಕ್ಷ್ಮೀಶ್ರೀನಿವಾಸ್, ಗೌರವ ಅಧ್ಯಕ್ಷೆ ಲಕ್ಷ್ಮಮ್ಮ, ತಾಲ್ಲೂಕು ಅಧ್ಯಕ್ಷೆ ರತ್ನಮ್ಮ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷೆ ಗಂಗರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.