ADVERTISEMENT

ಮೀಸಲಾತಿ ಹೋರಾಟ ಅಪಾಯ: ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅಭಿಮತ

ಹೊನ್ನಮ್ಮಗವಿ ಮಠ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2021, 3:27 IST
Last Updated 10 ಮಾರ್ಚ್ 2021, 3:27 IST
ನೂತನ ಗ್ರಾಮ ಪಂಚಾಯಿತಿ ಸದಸ್ಯರನ್ನು ಅಭಿನಂದಿಸಲಾಯಿತು
ನೂತನ ಗ್ರಾಮ ಪಂಚಾಯಿತಿ ಸದಸ್ಯರನ್ನು ಅಭಿನಂದಿಸಲಾಯಿತು   

ದೊಡ್ಡಬಳ್ಳಾಪುರ: ಬಸವಾದಿ ಶರಣರ ಆಶಯದಂತೆ ಜಾತಿ ವ್ಯವಸ್ಥೆ ತೊಲಗಬೇಕು. ಮೀಸಲಾತಿ ಹೋರಾಟ ಮುಂದಿನ ದಿನಗಳಲ್ಲಿ ಅಪಾಯಕಾರಿಯಾಗಲಿದೆ ಎಂದು ಶಿವಗಂಗೆ ಹೊನ್ನಮ್ಮಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪ‍ಟ್ಟರು.

ನಗರದ ಸೋಮೇಶ್ವರ ದೇಗುಲ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಸಮಾಜದಲ್ಲಿ ಬಸವಣ್ಣ ಅವರ ತತ್ವ, ವಚನಗಳನ್ನು ಅನಿವಾರ್ಯವಾಗಿ ಅಳವಡಿಕೊಳ್ಳಬೇಕಿದೆ‌. ಸಮಾಜದಲ್ಲಿ ಮನೆಗಳು ಎಷ್ಟು ಮುಖ್ಯವೋ ಮಠ ಮಂದಿರಗಳು ಅಷ್ಟೇ ಮುಖ್ಯ. ಭಕ್ತಾದಿಗಳು ಮಠಗಳ ಅಭಿವೃದ್ಧಿಗೂ ಶ್ರಮಿಸಬೇಕಿದೆ. ವೀರಶೈವ ಸಮುದಾಯದ ಪ್ರತಿಯೊಬ್ಬರೂ ಸಮುದಾಯದ ಏಳಿಗೆಗೆ ಶ್ರಮಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಮುನ್ನೆಲೆಗೆ ಬರುವಂತೆ ಮಾಡಬೇಕು. ಎಲ್ಲರೂ ಒಗ್ಗಟ್ಟಾಗಿ ವೀರಶೈವ ಸಮುದಾಯ ಸಂಘಟನೆಗೆ ಆದ್ಯತೆ ನೀಡಬೇಕು ಎಂದರು.

ADVERTISEMENT

ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಶರಣರು ಮತ್ತು ದಾರ್ಶನಿಕರಿಂದ ವಿಶ್ವದ ಭೂಪಟದಲ್ಲಿ ಗುರುತಿಸಿಕೊಂಡಿರುವ ಭಾರತಕ್ಕೆ ವಿಶಿಷ್ಟ ಧಾರ್ಮಿಕ ಪರಂಪರೆ ಇದೆ. ಸಮಾಜದ ಒಳಿತಿಗಾಗಿ ಶ್ರಮಿಸಲಾಗುವುದು. ತಾಲ್ಲೂಕಿನಲ್ಲಿ ಸಮುದಾಯದವರನ್ನು ಗುರುತಿಸಿ ಸದಸ್ಯತ್ವ ಆಂದೋಲನ ಹಮ್ಮಿಕೊಳ್ಳಲಾಗುವುದು. ಸರ್ಕಾರದಿಂದ ಸಿಗುವ ಎಲ್ಲ ಸವಲತ್ತು ತಲುಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ವಿರೂಪಾಕ್ಷಯ್ಯ, ರಾಜ್ಯ ಯುವ ಘಟಕ ಅಧ್ಯಕ್ಷ ಮನೋಹರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಾಜಮ್ಮ, ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸಾದ್, ನೆಲಮಂಗಲ ತಾಲ್ಲೂಕು ಘಟಕದ ಅಧ್ಯಕ್ಷೆ ವೇದಾವತಿ, ಉಪಾಧ್ಯಕ್ಷೆ ಗಂಗಮ್ಮ, ವೀರಶೈವ ಮುಖಂಡ ಹುಲಿಕಲ್ ನಟರಾಜ್, ಎಸ್‌.ದಯಾನಂದ, ಬಸವರಾಜ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.