ದೇವನಹಳ್ಳಿ: ಮತದಾನವು ಹಕ್ಕು ಮತ್ತು ಕರ್ತವ್ಯವಾಗಿದ್ದು ಮತದಾರರ ಪಟ್ಟಿ ಸಿದ್ಧಪಡಿಸುವ ಕೆಲಸದ ಬಗ್ಗೆ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಗ್ರಾಮಾಂತರ ಜಿಲ್ಲಾ ಮತದಾರರ ಪಟ್ಟಿಗಳ ವೀಕ್ಷಕ ಅಂಜುಂ ಪರ್ವೇಜ್ ಹೇಳಿದರು.
ಇಲ್ಲಿನ ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ರಾಜ್ಯ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2019ರ ಸಂಬಂಧ ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಸುವಿಕೆ ಹಾಗೂ ಸಂಬಂಧಿಸಿದ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
2019 ಜ. 1ಕ್ಕೆ 18 ವರ್ಷ ಪೂರೈಸುವ ಹಾಗೂ ಎಲ್ಲ ಅರ್ಹ ಮತದಾರರ ಹೆಸರನ್ನು ನೋಂದಾಯಿಸಬೇಕು. ಮೃತ ಪಟ್ಟ ಹಾಗೂ ಕಾಯಂ ವಾಸಿಗಳಲ್ಲದ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಮತದಾರರ ವಿವರಗಳ ನಮೂದಿನಲ್ಲಿರುವ ಎಲ್ಲ ಭಾಷೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಬೇಕು ಎಂದರು.
ಅನಿವಾಸಿ ಭಾರತೀಯರನ್ನು ನೋಂದಾಯಿಸಿದ ಪ್ರಜೆಗಳನ್ನು ಗುರುತಿಸುವುದು, ಸಂಕ್ಷಿಪ್ತ ಪರಿಷ್ಕರಣೆಯ ಉದ್ದೇಶ ಎಂದರು.
ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವಾಗ ಹಾಗೂ ತೆಗೆದುಹಾಕುವಾಗ ಬಂದಂತಹ ಅರ್ಜಿಗಳನ್ನು ಸ್ಪಷ್ಟವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಕುಂದು ಕೊರತೆಯ ದೂರುಗಳ ಬಗ್ಗೆ ಶೀಘ್ರವಾಗಿ ಪ್ರತಿಕ್ರಿಯಿಸಬೇಕು ಎಂದು ಹೇಳಿದರು.
ಮತದಾರರ ಪಟ್ಟಿ ಸಿದ್ಧಪಡಿಸುವಾಗ ಜಿಲ್ಲೆಯ ಒಟ್ಟು ಮತದಾರರು, ಮಹಿಳಾ ಮತ್ತು ಪುರುಷರು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟರು, ಅಂಗವಿಕಲ ಮತದಾರರ ಅಂಕಿ ಅಂಶಗಳ ವಿವರಗಳನ್ನು ಸಂಗ್ರಹಿಸಿ ಸಮಗ್ರ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ತಹಶೀಲ್ದಾರ್ ಗಳು, ನಗರ ಸಭೆ ಮತ್ತು ಪುರಸಭೆ ಮುಖ್ಯಾಧಿಕಾರಿಗಳು, ಕಂದಾಯ ನಿರೀಕ್ಷಕರು, ಸ್ಥಳೀಯ ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ತಯಾರಿಸುವಾಗ ಎಚ್ಚರಿಕೆ ವಹಿಸಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಬೇಕು ಎಂದರು.
ಜಿಲ್ಲಾಧಿಕಾರಿ ಕರೀಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ರಮ್ಯ, ಉಪ ವಿಭಾಗಾಧಿಕಾರಿ ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಹೇಮಂತ್ ಶರಣ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಡಾ.ಶಿವರುದ್ರಪ್ಪ, ನಾಲ್ಕು ತಾಲ್ಲೂಕುಗಳ ತಹಶೀಲ್ದಾರ್ ಗಳು ಮತ್ತು ಚುನಾವಣಾ ಶಿರಸ್ತೇದಾರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.