ADVERTISEMENT

ದೇವನಹಳ್ಳಿ: ಗ್ರಾಮೀಣ ರಸ್ತೆಗಳು ಮೇಲ್ದರ್ಜೆಗೆ

250 ಕಿ.ಮೀ. ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆ: ಶಾಸಕ ನಿಸರ್ಗ ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 13:51 IST
Last Updated 16 ಸೆಪ್ಟೆಂಬರ್ 2020, 13:51 IST
ರಸ್ತೆ ಕಾಮಗಾರಿಗೆ ನಡೆದ ಭೂಮಿ ಪೂಜೆಯಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಸೇರಿದಂತೆ ಗಣ್ಯರು ಇದ್ದರು
ರಸ್ತೆ ಕಾಮಗಾರಿಗೆ ನಡೆದ ಭೂಮಿ ಪೂಜೆಯಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಸೇರಿದಂತೆ ಗಣ್ಯರು ಇದ್ದರು   

ದೇವನಹಳ್ಳಿ: ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿರುವ 250 ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಸಂಬಂಧಿಸಿದ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು .

ಇಲ್ಲಿನ ಬೊಮ್ಮವಾರ ಗ್ರಾಮದ ಬಳಿ ₹ 4 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ನಡೆದ ಭೂಮಿ ಪೂಜೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇವನಹಳ್ಳಿ ನಗರದ ಬೈಪಾಸ್ ರಸ್ತೆಯಿಂದ ಕುಂದಾಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಮೂರು ದಶಕಗಳಿಂದ ದುರಸ್ತಿಯಾಗಿರಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ₹ 4 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಬಿಜೆಪಿ ಸರ್ಕಾರ ಅಡಳಿತಕ್ಕೆ ಬಂದ ನಂತರ ತಡೆ ಹಿಡಿಯಲಾಗಿತ್ತು. ಸಂಬಂಧಿಸಿದ ಸಚಿವರಿಗೆ ಮನವಿ ಮಾಡಿದ ನಂತರ ಅನುದಾನ ಬಿಡುಗಡೆಯಾಗಿತ್ತು. ಟೆಂಡರ್ ಪ್ರಕ್ರಿಯೆ ನಡೆದು ಕಾಮಗಾರಿ ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ADVERTISEMENT

ದೇವಗಾನಹಳ್ಳಿಯಿಂದ ದೇವನಹಳ್ಳಿ ಬೈಪಾಸ್ ರಸ್ತೆಯವರೆಗೆ 4.4 ಕಿ.ಮೀ ರಸ್ತೆಯನ್ನು 3.75 ಮೀ ಹೆಚ್ಚುವರಿ ಅಗಲೀಕರಣಗೊಳಿಸಿ ಡಾಂಬರೀಕರಣ ಮಾಡಲಾಗುತ್ತದೆ. ಈ ರಸ್ತೆ ಮದ್ಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಜಿಲ್ಲಾ ನಿರ್ಮಿತಿ ಕೇಂದ್ರ ಕಚೇರಿ ಇದೆ. ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿಕೆಯಾಗುತ್ತಿದ್ದು, ರಾಜ್ಯ ಹೆದ್ದಾರಿಗೆ ಸೇರ್ಪಡೆಗೊಳ್ಳಲಿದೆ ಎಂದು ಹೇಳಿದರು.

ಜೆಡಿಎಸ್ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ರವೀಂದ್ರ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಜೆಡಿಎಸ್ ಹಿಂದುಳಿದ ವರ್ಗಗಳ ತಾಲ್ಲೂಕು ಘಟಕ ಅಧ್ಯಕ್ಷ ಲಕ್ಷಣ್, ಕಸಬಾ ಹೋಬಳಿ ಘಟಕ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ಪುರಸಭೆ ಸದಸ್ಯ ನಾಗೇಶ್, ಮುಖಂಡರಾದ ರಾಮಮೂರ್ತಿ, ಸುಂದರೇಶ್, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮುನಿರಾಜು, ಮುನಿನಂಜಪ್ಪ, ರವಿಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.