ದೇವನಹಳ್ಳಿ: ಗ್ರಾಮಾಂತರ ಜಿಲ್ಲೆಯಲ್ಲಿ 51 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಹೇಳಿದರು.
ಇಲ್ಲಿನ ಆಕಾಶ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ಲಸಿಕೆ ಹಾಕುವ ಅಣಕು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕಿನಲ್ಲಿರುವ 46 ಪ್ರಾಥಮಿಕ ಆರೋಗ್ಯ ಕೇಂದ್ರ, ನಾಲ್ಕು ತಾಲ್ಲೂಕಿನ ಸಮುದಾಯದ ಆರೋಗ್ಯ ಕೇಂದ್ರ, ಎರಡು ನಗರ ಘಟಕ ಕೇಂದ್ರ, ಹೊಸಕೋಟೆ ಎಂ.ಇ.ಜೆ, ನೆಲಮಂಗಲ ಸಿದ್ಧಾರ್ಥ, ದೇವನಹಳ್ಳಿ ಆಕಾಶ್ ವೈದ್ಯಕೀಯ ಕಾಲೇಜುಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಪ್ರತಿ ಲಸಿಕಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲು ಕನಿಷ್ಠ 10 ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಶಾಲಾ ಕಾಲೇಜುಗಳಲ್ಲಿ ಲಸಿಕೆ ಕೇಂದ್ರ ಆರಂಭಿಸಿಲ್ಲ. ಕೊರೊನಾ ವಾರಿಯರ್ಸ್ಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು.
ಎರಡನೆ ಹಂತದಲ್ಲಿ ಎನ್.ಸಿ.ಸಿ ಘಟಕ, ಪೊಲೀಸ್ ಸಿಬ್ಬಂದಿಗೆ, ಮೂರನೆ ಹಂತದಲ್ಲಿ 50ವರ್ಷ ಮೆಲ್ಪಟ್ಟವರಿಗೆ ನಂತರ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವವರಿಗೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಮಾನವನ ಜೀವನಕ್ಕೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ. ಫಲಾನುಭವಿಗಳು ಲಸಿಕೆ ಕೇಂದ್ರದಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಾಗ ಡಾಟಾದಲ್ಲಿ ನೊಂದಣಿಯಾದ ನಂತರ ಫಲಾನುಭವಿಗಳ ಮೊಬೈಲ್ ಗೆ ಸಂದೇಶ ಬರುತ್ತದೆ. ಆಗ ಬಂದು ಲಸಿಕೆ ಹಾಕಿಸಿಕೊಂಡು ಹೋಗಬಹುದು. ಕಾಯ್ದಿರಿಸಿದ ಕೊಠಡಿ, ಲಸಿಕೆ ನೀಡುವ ಕೊಠಡಿ ಇರಲಿದೆ. ಆಕಸ್ಮಿಕ ಲಸಿಕೆ ಪಡೆದ ನಂತರ ಆರೋಗ್ಯದಲ್ಲಿ ಏರುಪೇರುಯಾದರೆ ಪ್ರಥಮ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಮಾತನಾಡಿ, ಪ್ರತಿ ಕೇಂದ್ರದಲ್ಲಿ ಒಂದು ದಿನಕ್ಕೆ 100 ಜನರಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ಪ್ರಸ್ತುತ ಜಿಲ್ಲೆಯಲ್ಲಿ 9347 ಅರ್ಹರು ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ನೋಂದಣಿಗೆ ಅನುಗುಣವಾಗಿ ಹೆಚ್ಚುವರಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಪಲ್ಸ್ ಪೋಲಿಯೊ ಮಾದರಿಯಲ್ಲಿ ಇಡೀ ದೇಶದಲ್ಲಿ ಏಕಕಾಲದಲ್ಲಿ ಆರಂಭಿಸುವ ಸಾಧ್ಯತೆ ಇದೆ ಎಂದುಹೇಳಿದರು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮುನಿರಾಜು, ಡಾ.ಶಕೀಲಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.