ದೇವನಹಳ್ಳಿ: ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಅಗತ್ಯವಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ತಿಳಿಸಿದರು.
ಇಲ್ಲಿನ ಚಪ್ಪರಕಲ್ಲು ಬಳಿ ಇರುವ ವಿಹಾನ್ ಪಬ್ಲಿಕ್ ಶಾಲೆಯಲ್ಲಿ ವಿಹಾನ್ ವೈಭವ 5ನೇ ವರ್ಷದ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ದೇಶ ಪ್ರಗತಿಯತ್ತ ಸಾಗಬೇಕಾದರೆ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದ್ದು. ಸಮಗ್ರ ಶಿಕ್ಷಣ ಮಕ್ಕಳಲ್ಲಿ ಕಡಿಮೆಯಾಗುತ್ತಿದೆ. ಶಾಲೆಗಳಲ್ಲಿ ಶಿಕ್ಷಕರ ಮತ್ತು ಮನೆಯಲ್ಲಿ ಪೊಷಕರ ಜವಾಬ್ದಾರಿ ಹೆಚ್ಚಬೇಕು. ಶಿಕ್ಷಣದ ಪ್ರಾಥಮಿಕ ಹಂತಗಳು ಅಶಾದಾಯಕವಾಗಿದ್ದರೆ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಫಲಿತಾಂಶ ಪಡೆಯಲು ಸಾಧ್ಯ’ ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪ್ರತಿಯೊಂದು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ವ್ಯಕ್ತಿತ್ವ ವಿಕಸನಕ್ಕೆ ಪ್ರತಿಯೊಂದು ಕ್ಷೇತ್ರದ ಮಾಹಿತಿ ಪಡೆದುಕೊಳ್ಳಬೇಕು. ನಾಡಿನ ಸಂಸ್ಕೃತಿ, ಭಾಷೆ, ಕಲೆಯ ಬಗ್ಗೆ ಅರಿವು ಮೂಡಿಸಬೇಕು. ಭವಿಷ್ಯದಲ್ಲಿ ವಿದ್ಯಾರ್ಥಿಗಳು ಕ್ರಿಯಾತ್ಮಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹೆಚ್ಚಿಸಿಕೊಂಡರೆ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸುಲಭವಾಗಲಿದೆ. ಪೋಷಕರು ಮಕ್ಕಳ ಮೇಲೆ ಶೇಕಡವಾರು ಅಂಕಗಳಿಕೆಗಾಗಿ ಒತ್ತಡ ಹೇರಬಾರದು’ ಎಂದು ಹೇಳಿದರು.
‘ಮಕ್ಕಳು ತಾಯಿ ನೆಲದ ಭಾಷೆಯ ಜತೆಗೆ ನಮ್ಮ ರಾಷ್ಟ್ರೀಯ ಭಾಷೆಗಳನ್ನು ಕಲಿತುಕೊಳ್ಳಬೇಕು. ಆದರೆ, ಕನ್ನಡ ನಾಡಿನಲ್ಲಿ ನಮ್ಮ ಮಾತೃಭಾಷೆಯನ್ನು ಎಂದಿಗೂ ಮರೆಯಬಾರದು’ ಎಂದು ಸಲಹೆ ಮಾಡಿದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪ್ರತಾಪ್ಯಾದವ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಂಗ ಸಂಸ್ಥೆಯಾದ ಜನಜಾಗೃತಿ ವೇದಿಕೆ ಜಿಲ್ಲಾ ಘಟಕ ಉಪಾಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ, ಪೋಷಕರು, ಶಾಲಾ ಶಿಕ್ಷಕವೃಂದ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.