ADVERTISEMENT

ದೇವನಹಳ್ಳಿ: ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ

15 ಕೇಂದ್ರ ಸ್ಥಾಪನೆ: 10,320 ವಿದ್ಯಾರ್ಥಿಗಳು ನೋಂದಣಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2023, 4:07 IST
Last Updated 9 ಮಾರ್ಚ್ 2023, 4:07 IST
ವಿಜಯಪುರದ ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಅಂತಿಮ ಸಿದ್ಧತೆ ನಡೆಸುತ್ತಿರುವ ಸಿಬ್ಬಂದಿ
ವಿಜಯಪುರದ ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಅಂತಿಮ ಸಿದ್ಧತೆ ನಡೆಸುತ್ತಿರುವ ಸಿಬ್ಬಂದಿ   

ದೇವನಹಳ್ಳಿ: ಮಾರ್ಚ್ 9ರಿಂದ 29ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯು ಜಿಲ್ಲೆಯಾದ್ಯಂತ ನಡೆಯಲಿದೆ. ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪ್ರಮೋದ್‌ ತಿಳಿಸಿದರು.

ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಾರ್ಚ್ 9ರಿಂದ 29ರವರೆಗೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಬೆಂಗ ಳೂರು ಗ್ರಾಮಾಂತರ ಜಿಲ್ಲೆಯ ನೆಲ ಮಂಗಲ ತಾಲ್ಲೂಕಿನ 5, ಹೊಸಕೋಟೆ 4, ದೊಡ್ಡಬಳ್ಳಾಪುರ 3 ಹಾಗೂ ದೇವನಹಳ್ಳಿ ತಾಲ್ಲೂಕಿನ 3 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟಾರೆ 15 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ADVERTISEMENT

8 ಸರ್ಕಾರಿ ಪದವಿಪೂರ್ವ ಕಾಲೇ ಜು, 2 ಅನುದಾನಿತ ಪದವಿಪೂರ್ವ ಕಾಲೇಜು ಹಾಗೂ 4 ಅನುದಾನರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿದೆ ಎಂದರು.

ಪರೀಕ್ಷೆಗೆ ಹಾಜರಾಗುತ್ತಿರುವ ಜಿಲ್ಲೆಯ 10,320 ವಿದ್ಯಾರ್ಥಿಗಳ ಪೈಕಿ ಬಾಲಕರು 4,724 ಮತ್ತು 5,596 ಬಾಲಕಿಯರು ನೋಂದಣಿಯಾಗಿದ್ದಾರೆ. ಕಲಾ ವಿಭಾಗದ 1,590 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ 5,552 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದ 3,178 ವಿದ್ಯಾರ್ಥಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಯೂ ಒಂದಾಗಿದೆ. ಯಾವುದೇ ಆತಂಕ ಪಡದೆ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುವಂತೆ ಪ್ರೇರೇಪಿಸಲು ಉಪನ್ಯಾಸಕರು ಕ್ರಮವಹಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯೊಳಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸೂಕ್ತ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್‌ ಕೊಂಡೊಯ್ಯದಂತೆ ಮೇಲ್ವಿಚಾರಕರು ಎಚ್ಚರವಹಿಸಬೇಕು. ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡಬೇಕು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಬಹುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.