ದೇವನಹಳ್ಳಿ: ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್–19ರಿಂದಮೃತಪಟ್ಟವರಿಗಾಗಿ ಪ್ರತ್ಯೇಕ ಸ್ಮಶಾನದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹೇಳಿದರು.
‘ವಿಡಿಯೊ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದು, ಅಗತ್ಯ ಸೂಚನೆಯನ್ನೂ ನೀಡುತ್ತಿದ್ದೇನೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ರಾಜ್ಯದ ವಿವಿಧ ಜಿಲ್ಲೆಯಲ್ಲಿ ನಡೆದಿರುವ ಸೋಂಕಿತರ ಅಂತ್ಯಕ್ರಿಯೆ ಬಗ್ಗೆ ಸಾರ್ವಜನಿಕರ ವಲಯದಲ್ಲಿ ಚರ್ಚೆಯಾಗುತ್ತಿದೆ. ಆ ರೀತಿ ನಮ್ಮ ಜಿಲ್ಲೆಯಲ್ಲಿ ಆಗಬಾರದು ಎನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾನವೀಯ ನೆಲಗಟ್ಟಿನಲ್ಲಿ ಪ್ರತಿಯೊಬ್ಬರನ್ನು ಒಂದೇ ರೀತಿ ಕಾಣಬೇಕು ಎಂಬುದನ್ನು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.
‘ಈ ಹಿಂದೆ ಕೋವಿಡ್–19ರಿಂದ ಮೃತಪಟ್ಟವರನ್ನು ಆಯಾ ಗ್ರಾಮದಲ್ಲಿ ಇರುವ ಸ್ಮಶಾನದಲ್ಲೇ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ, ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮತ್ತೊಂದೆಡೆ, ಪ್ರತ್ಯೇಕ ಸ್ಮಶಾನ ಗುರುತಿಸಲು ಮುಂದಾಗುತ್ತಿರುವಾಗ ಸರ್ವೇ ಇಲಾಖೆ ಮತ್ತು ಕಂದಾಯ ಇಲಾಖೆ ವಿರುದ್ಧವೂ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗದುಕೊಂಡು ಜಾಗ ಗುರುತಿಸಬೇಕಾಗಿದೆ’ ಎಂದರು.
‘ಗ್ರಾಮಗಳಿಂದ ಕನಿಷ್ಠ 3ರಿಂದ 4ನಲ್ಲಿ ಜನವಸತಿ ಇಲ್ಲದ ಜಾಗವನ್ನು ಗುರುತಿಸಲಾಗುತ್ತಿದೆ. ಮಳೆ ನೀರು ಹೆಚ್ಚು ಹರಿಯದ ಎತ್ತರ ಪ್ರದೇಶದಲ್ಲಿ ಸ್ಮಶಾನಕ್ಕೆ ಜಾಗ ಗುರುತಿಸುವಂತೆ ಜಿಲ್ಲೆಯ ನಾಲ್ಕೂ ತಾಲ್ಲೂಕಿನ ತಹಶೀಲ್ದಾರ್ಗಳಿಗೆ ಸೂಚಿಸಲಾಗಿದ್ದು, ಅವರೆಲ್ಲ ಕಾರ್ಯೋನ್ಮುಖರಾಗಿದ್ದಾರೆ’ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.