
ಬಾಲ ಕಾರ್ಮಿಕರು
(ಪ್ರಾತಿನಿಧಿಕ ಚಿತ್ರ)
ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಎಂ.ಆರ್.ಟೆಕ್ನಾಲಜೀಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರಾಜ್ಯ ಹಾಗೂ ಹೊರ ರಾಜ್ಯ ಏಳು ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ರಾಜ್ಯ ಅಧ್ಯಕ್ಷ ಶಶಿಧರ್ ಕೋಸಂಬೆ ಅಧ್ಯಕ್ಷತೆಯಲ್ಲಿ ಮಕ್ಕಳೊಂದಿಗೆ ನಡೆದ ಸಂವಾದಲ್ಲಿ ಭಾಗವಹಿಸಿದ್ದ ರಾಜ್ಯದ ಇತರೆ ಜಿಲ್ಲೆಗಳ ಮಕ್ಕಳು ಇಲ್ಲಿನ ಶಾಲೆಗಳಲ್ಲಿ ಉತ್ತಮ ಮೂಲ ಸೌರ್ಯಗಳಿವೆ. ಹಾಗೆಯೇ ತಮ್ಮ ಪೋಷಕರು ಕೆಲಸಕ್ಕಾಗಿ ಈ ಭಾಗಕ್ಕೆ ಬಂದಿರುವುದರಿಂದ ನಾವುಗಳು ಶಾಲೆಗೆ ಹೋಗುತ್ತಿದ್ದೇವೆ. ಆದರೆ ನಮ್ಮಂತೆಯೇ ಇಲ್ಲಿಗೆ ಬಂದಿರುವ ಇನ್ನು ಹತ್ತಾರು ಜನ ಮಕ್ಕಳಿಗು ಕಲಿಯುವ ಆಸೆ ಇದ್ದರು ಹಲವಾರು ಕಾರಣಗಳಿಂದ ಬಾಶೆಟ್ಟಿಹಳ್ಳಿಯಲ್ಲಿನ ಕೈಗಾರಿಕೆಗಳಲ್ಲಿ ದುಡಿಮೆಗೆ ಸೇರಿದ್ದಾರೆ ಎನ್ನುವ ಮಾಹಿತಿ ನೀಡಿದ್ದರು.
ಈ ಮಾಹಿತಿ ಆಧಾರಿಸಿ ಶಶಿಧರ್ ಕೋಸಂಬೆ ನೇತೃತ್ವದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು, ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಎಂ.ಆರ್.ಟೆಕ್ನಾಲಜೀಸ್ ಕಾರ್ಖಾನೆ ಸೇರಿದಂತೆ ಇತರೆಡೆಗಳಿಗೆ ದಿಢೀರ್ ಭೇಟಿ ನೀಡಿ ರಾಜ್ಯ ಹಾಗೂ ಅಸ್ಸಾಂ ಮೂಲದ ಏಳು ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.
ಮಕ್ಕಳನ್ನು ಮಕ್ಕಳ ರಕ್ಷಣಾ ಸಮಿತಿ ಮುಂದೆ ಹಾಜರು ಪಡಿಸಿ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಗಿದೆ. ಹಾಗೆಯೇ ಮಕ್ಕಳಿಂದ ದುಡಿಸಿಕೊಳ್ಳುತ್ತಿದ್ದ ಎಂ.ಆರ್.ಟೆಕ್ನಾಲಜೀಸ್ ಕಾರ್ಖಾನೆ ಮಾಲೀಕರ ವಿರುದ್ಧ ದೂರು ದಾಖಲಿಸಿ ಮಾಹಿತಿ ನೀಡುವಂತೆ ಕಾರ್ಮಿಕ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಸಮಿತಿಗೆ ಸೂಚನೆ ನೀಡಲಾಗಿದೆ ಎಂದು ಶಶಿಧರ್ ಕೋಸಂಬೆ ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಲಕ್ಷ್ಮೀ, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.