ADVERTISEMENT

ಕಾಂಗ್ರೆಸ್‌ ಟಿಕೆಟ್‌ ನಿಶ್ಚಿತ: ಶರತ್ ಬಚ್ಚೇಗೌಡ

ಹೊಸಕೋಟೆ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 6:14 IST
Last Updated 29 ನವೆಂಬರ್ 2022, 6:14 IST
ಹೊಸಕೋಟೆ ತಾಲ್ಲೂಕಿನ ಹಂದೇನಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು
ಹೊಸಕೋಟೆ ತಾಲ್ಲೂಕಿನ ಹಂದೇನಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು   

ಹೊಸಕೋಟೆ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಮಗೆ ಟಿಕೆಟ್ ನೀಡಲಿದೆ. ತಾವು ಪಕ್ಷಕ್ಕೆ ಬಾಹ್ಯ ಬೆಂಬಲ ಸೂಚಿಸಿದಾಗ ನೀಡಿದ್ದ ಭರವಸೆಯನ್ನು ವರಿಷ್ಠರು ಈಡೇರಿಸುತ್ತಾರೆ’ ಶಾಸಕ ಶರತ್ ಬಚ್ಚೇಗೌಡ ವಿಶ್ವಾಸ
ವ್ಯಕ್ತಪಡಿಸಿದರು.

ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಹಂದೇನಹಳ್ಳಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಎತ್ತಿನಹೊಳೆ ಯೋಜನೆ ಹಾಗೂ ಗ್ರಾಮ ಪಂಚಾಯಿತಿಯಿಂದ ಸುಮಾರು ₹ 30 ಲಕ್ಷ ವೆಚ್ಚದಲ್ಲಿ ಎಸ್.ಸಿ. ಸ್ಮಶಾನ ಅಭಿವೃದ್ಧಿ, ಸಾಮಾನ್ಯ ವರ್ಗದ ಸ್ಮಶಾನ ಅಭಿವೃದ್ಧಿ ಹಾಗೂ ದರ್ಗಾಕ್ಕೆ ತೆರಳುವ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು
ಮಾತನಾಡಿದರು.

‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸುವ ಆಕಾಂಕ್ಷಿಗಳು ಸಹಜವಾಗಿ ಇದ್ದೇ ಇರುತ್ತಾರೆ. ತಾಲ್ಲೂಕಿನ ಇಬ್ಬರು ಮುಖಂಡರು ಅರ್ಜಿ ಸಲ್ಲಿಸಿ ನನ್ನ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ, ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು
ತಿಳಿಸಿದರು.

ADVERTISEMENT

‘ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾರ್ಯಕ್ಕಾಗಿ ತಾವು ನಿರಂತರ ಪ್ರಯತ್ನಿಸುತ್ತಿದ್ದು, ವಿವಿಧ ಯೋಜನೆಯಡಿ ತಾಲ್ಲೂಕಿಗೆ ಸಾಕಷ್ಟು ಅನುದಾನ ತಂದಿದ್ದು, ಅಭಿವೃದ್ಧಿಗೆ ಒತ್ತು ನೀಡಿದ್ದೇನೆ’ ಎಂದರು.

ಹಂದೇನಹಳ್ಳಿ ಕಾಲೊನಿಯ ಮಾರಮ್ಮದೇವಿ ದೇವಾಲಯದ ಮಹಾ ಕುಂಭಾಭಿಷೇಕ ಮತ್ತು ಸ್ಥಿರ ಬಿಂದು ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಹೊಸಕೋಟೆ ಟೌನ್ ಎಸ್‌ಎಫ್‌ಸಿಎಸ್ ಬ್ಯಾಂಕ್ ಅಧ್ಯಕ್ಷ ಕೃಷ್ಣಮೂರ್ತಿ, ಅನುಗೊಂಡನಹಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾ ರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಹೋರೊಹಳ್ಳಿ ದೇವರಾಜ್, ಮುಖಂಡರಾದ ಬಾಬು ರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.