ಹೊಸಕೋಟೆ: ‘ಅಭಿವೃದ್ಧಿ ಕಾಮಗಾರಿಗಳಲ್ಲಿ ಶೇ 40 ಕಮಿಷನ್ ಪಡೆಯುವ ಬಿಜೆಪಿಯನ್ನು ಈ ಬಾರಿ ಕಿತ್ತೊಗೆದು ನುಡಿದಂತೆ ನಡೆಯುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂದು ಶಾಸಕ ಶರತ್ ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಸಮೇತನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡವತ್ತಿ ಗ್ರಾಮದಲ್ಲಿ ₹ 30 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಿಜೆಪಿಯ ಆಶ್ವಾಸನೆಗಳಿಗೆ ಮರುಳಾಗಬೇಡಿ. ಕಳೆದ ಬಾರಿ ಪ್ರಧಾನಿ ಮೋದಿ ಪ್ರತಿ ವ್ಯಕ್ತಿಯ ಬ್ಯಾಂಕ್ ಖಾತೆಗೆ ₹ 15 ಲಕ್ಷ ನೀಡುವುದಾಗಿ ಹೇಳಿದ್ದರು. ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಾಗಿದೆ. ಅಡುಗೆ ಎಣ್ಣೆ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದ್ದಾರೆ ಎಂದು ಆರೋಪಿಸಿದರು.
ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯ ಎಲ್ಲಾ ಭರವಸೆಗಳನ್ನು ಈಡೇರಿಸಿದೆ ಎಂದು
ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಮಾತನಾಡಿ, ಗ್ರಾಮದಲ್ಲಿ ಕಳೆದ ಮೂರುವರೆ ವರ್ಷಗಳ ಕಾಲ ಶಾಸಕರ ಅನುದಾನದಲ್ಲಿ ಬಿಡುಗಡೆಯಾದ ₹ 4 ಕೋಟಿ ಅನುದಾನದಲ್ಲಿ ಗ್ರಾಮಕ್ಕೆ₹ 30 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. ಆದರೆ, ಕಳೆದ ಬಾರಿ ಶಾಸಕ ಹಾಗೂ ಮಂತ್ರಿಯಾಗಿದ್ದವರು ಈ ಗ್ರಾಮಕ್ಕೆ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡಲಿಲ್ಲ. ಜನರು ಈ ಬಾರಿ ಅಭಿವೃದ್ಧಿ ಹರಿಕಾರರನ್ನು ಆಯ್ಕೆ ಮಾಡಬೇಕು ಎಂದು ಮನವಿ
ಮಾಡಿದರು.
ಮುಖಂಡರಾದ ನಾರಾಯಣಗೌಡ, ಸೊಣ್ಣಪ್ಪ, ಶೇಷಣ್ಣ, ಸುನಿಲ್, ವೆಂಕಟೇಶಣ್ಣ, ಶಿವಣ್ಣ ಗೌಡ, ವೈಎಸ್ಎಂ ಮಂಜು, ಸಂತೋಷ್, ಶಂಕರ್, ಸುಬ್ಬಣ್ಣ, ಸಂತೋಷ್ ಗೌಡ, ಬದ್ರಿನಾಥ್, ಕಾಂತರಾಜ್, ಮುನೇಶ್, ಅವಿನಾಶ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.