ಸೂಲಿಬೆಲೆ: ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳಿಗೆ ಸರ್ಕಾರ ನೀಡುವ ಅನುದಾನದ ಜತೆಗೆ, ದಾನಿಗಳು ನೀಡುವ ಅನುದಾನವು ಬಹಳ ಮುಖ್ಯವಾಗಿರುತ್ತದೆ. ನಮ್ಮೂರ ಸರ್ಕಾರಿ ಶಾಲೆಗಳ ಅಭಿವೃದ್ಧಿ ಜವಾಬ್ದಾರಿ ಸರ್ಕಾರದ್ದು ಎಂದು ಭಾವಿಸಿ ಸುಮ್ಮನಿರಬೇಡಿ, ಪ್ರತಿಯೊಬ್ಬರ ಜವಾಬ್ದಾರಿಯೆಂದು ಅರಿತು ಕೆಲಸ ಮಾಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಸೂಲಿಬೆಲೆ ಹೋಬಳಿಯ ಬೆಟ್ಟಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ, ಕಾಂಪೌಂಡ್ ಹಾಗೂ ಶೌಚಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಹೊಸಕೋಟೆ ಕೈಗಾರಿಕಾ ಪ್ರದೇಶದ ತೋರ್ಷಿಮಾ ಕಂಪನಿ, ಕಂಪನಿ ಸಾಮಾಜಿಕ ಹೊಣೆಗಾರಿಕೆಯ ಅನುದಾನದಲ್ಲಿ ಸುಮಾರು ₹14 ಲಕ್ಷ ವೆಚ್ಚದಲ್ಲಿ ಶಾಲಾ ಕಟ್ಟಡ, ಶೌಚಾಲಯ ಹಾಗೂ ಕಾಂಪೌಂಡ್ ನಿರ್ಮಾಣ ಮಾಡಿ ಕೊಟ್ಟಿರುವುದು ಸಂತೋಷದ ವಿಚಾರವಾಗಿದ್ದು, ಕಂಪನಿಯ ಸಾಮಾಜಿಕ ಕಾಳಜಿಗೆ ತುಂಬು ಹೃದಯದ ವಂದನೆಗಳು ಎಂದರು.
ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೇ, ಗ್ರಾಮಗಳ ಅಭಿವೃದ್ಧಿಗಾಗಿ ಸಹಕಾರ ನೀಡುವ ಮೂಲಕ ತಾಲ್ಲೂಕನ್ನು ಮಾದರಿ ತಾಲ್ಲೂಕನ್ನಾಗಿ ಮಾಡಲು ದುಡಿಯೋಣ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ವಿ.ಪ್ರಸಾದ್ ಮಾತನಾಡಿ, ತೋರ್ಷಿಮ ಕಂಪನಿಯವರ ಮಾದರಿಯಲ್ಲಿ ಮತ್ತಷ್ಟು ಕಂಪನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಂಕಣಬದ್ಧರಾಗಬೇಕು ಎಂದರು.
ಜೇನುಗೂಡು ರೂರಲ್ ಡೆವಲಪ್ಮೆಂಟ್ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಿದರೆ ಉತ್ತಮ ವಿದ್ಯಾರ್ಥಿಗಳು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣವಾಗಲು ಸಹಕಾರಿಯಾಗುತ್ತದೆ. ಶಿಕ್ಷಕರು ಶಿಲ್ಪಿಗಳಾಗಿ ಕೆಲಸ ಮಾಡಬೇಕು ಎಂದರು.
ತೋರ್ಷಿಮ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಗ್ರೋವರ್ ಅವರು ಶಾಲೆ ಮಕ್ಕಳಿಗೆ ₹20 ಸಾವಿರ ಮೌಲ್ಯದ ಕ್ರೀಡಾ ಸಾಮಾಗ್ರಿಗಳನ್ನು ಉಡುಗೂರೆಯಾಗಿ ನೀಡಿದರು.
ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಗ್ರೋವರ್, ಸಂಪನ್ಮೂಲ ವ್ಯವಸ್ಥಾಪಕಿ ಯಾಸ್ಮೀನ್, ರೀಟಾ, ಉಷಾ, ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ, ಸಮನ್ವಯಾಧಿಕಾರಿ ಲಲಿತಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಜಾತ ರಮೇಶ್, ಸದಸ್ಯೆ ಸುಧಾ ನಾರಾಯಣಸ್ವಾಮಿ, ಜೇನುಗೂಡು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಶಾಲೆ ಮುಖ್ಯ ಶಿಕ್ಷಕ ಬಿ.ಶ್ರೀನಿವಾಸ್, ಶಿಕ್ಷಕರಾದ ಶೋಭಾ, ಮಮತಾ, ಶಶಿಕಲಾ ಹಾಗೂ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.