ADVERTISEMENT

ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 12:56 IST
Last Updated 16 ಜನವರಿ 2019, 12:56 IST
ವಿಜಯಪುರ ಪುರಸಭಾ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ ಮಾಡಿದರು
ವಿಜಯಪುರ ಪುರಸಭಾ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ ಮಾಡಿದರು   

ವಿಜಯಪುರ: ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬರು ಅನುಕರಣೆ ಮಾಡುವ ಮನೋಭಾವನೆ ಹೊಂದುವಂತಾಗಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಹೇಳಿದರು.

ಇಲ್ಲಿನ ಪುರಸಭಾ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣ ರಾಜಕೀಯ ಮತ್ತು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.

ADVERTISEMENT

ಅಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ಕಂದಾಯ ನಿರೀಕ್ಷಕ ಜಯಕಿರಣ್ ಮಾತನಾಡಿ, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.

ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಿಹಿ ಹಂಚಲಾಯಿತು. ಪುಷ್ಪ ನಮನ ಸಲ್ಲಿಸಲಾಯಿತು. ಪೌರಕಾರ್ಮಿಕರು, ಪುರಸಭಾ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.