ದೇವನಹಳ್ಳಿ: ‘ಪ್ರಜಾವಾಣಿ’ ದಿನಪತ್ರಿಕೆ ಜ್ಞಾನಾರ್ಜನೆಯ ಭಂಡಾರವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ‘ಪ್ರಜಾವಾಣಿ’ ಮತ್ತು ಡೆಕ್ಕನ್ ಹೆರಾಲ್ಡ್ ಪ್ರಸರಣ ವಿಭಾಗದ ಡಿಜಿಎಂ ಜಗನ್ನಾಥ್ ಜೋಶಿ ಹೇಳಿದರು.
ಇಲ್ಲಿನ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಬುಧವಾರ ‘ಪ್ರಜಾವಾಣಿ’ ಮತ್ತು ಡೆಕ್ಕನ್ ಹೆರಾಲ್ಡ್ ವತಿಯಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಪ್ರಜಾವಾಣಿ’ ಹಿಂದಿಗಿಂತ ಈಗ ಹೊಸರೂಪದಲ್ಲಿ ಮುದ್ರಣಗೊಳ್ಳುತ್ತಿದೆ. ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದೆ. ಕೃಷಿ, ತಾಂತ್ರಿಕ ಕ್ಷೇತ್ರದ ಬೆಳವಣಿಗೆ, 10ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷಾ ಮಾರ್ಗದರ್ಶಿ ಪ್ರಕಟಿಸುತ್ತಿದೆ. ಕೋವಿಡ್ ಸಂದರ್ಭದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಆನ್ಲೈನ್ ಶಿಕ್ಷಣ ಪಡೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಪರೀಕ್ಷಾ ಮಾರ್ಗದರ್ಶಿ ಪ್ರಕಟಿಸಲಾಗುತ್ತಿದೆ ಎಂದು
ಹೇಳಿದರು.
ಪ್ರತಿದಿನ ಒಂದೊಂದು ಕ್ಷೇತ್ರದ ವಿಶೇಷ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ಕ್ಷೇಮಕುಶಲ, ಭೂಮಿಕಾ, ಕ್ರೀಡೆ, ಕೃಷಿ ಕ್ಷೇತ್ರ, ತಾಂತ್ರಿಕ ಬೆಳವಣಿಗೆ, ವಿವಿಧ ಕ್ಷೇತ್ರದಲ್ಲಿನ ಸಂಶೋಧನೆ ಮತ್ತು ಆವಿಷ್ಕಾರ, ಅಂತರ್ಜಲ ಮರುಪೂರಣ, ಪರಿಸರ ಮಾಲಿನ್ಯದಿಂದಾಗುವ ದುಷ್ಪರಿಣಾಮದ ಬಗ್ಗೆ ತಜ್ಞರ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
‘ಪ್ರಜಾವಾಣಿ’ ವಿದ್ಯಾರ್ಥಿಗಳ ಆಸಕ್ತಿದಾಯಕ, ಪ್ರಚಲಿತ ವಿದ್ಯಮಾನಗಳ ಬಗ್ಗೆ ವಿಶೇಷ ವರದಿ ಪ್ರಕಟಿಸುತ್ತಿದೆ. ಪ್ರಸ್ತುತ ಇಡೀ ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ಕಾರ್ಯಾಗಾರ ನಡೆಸಿ ಸ್ವಯಂ ಉದ್ಯೋಗ (ಎರಡು ತಾಸು)ಕ್ಕೆ ಅವಕಾಶ ನೀಡಿ ಆರ್ಥಿಕ ಚೇತರಿಕೆಗೆ ಸಹಕರಿಸುತ್ತಿದೆ ಎಂದರು.
ಪ್ರಸರಣ ವಿಭಾಗದ ಹಿರಿಯ ವ್ಯವಸ್ಥಾಪಕ ಬಸವರಾಜ್ ಮಾತನಾಡಿ, ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಳ್ಳಲು ‘ಪ್ರಜಾವಾಣಿ’ಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶಿ ಅತಿಹೆಚ್ಚು ಅನುಕೂಲವಾಗಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಇತರರಿಗೂ ತಿಳಿಸಬೇಕು ಎಂದು ಹೇಳಿದರು.
ಪ್ರಾಂಶುಪಾಲೆ ಸುರೇಖಾ ಮೋಹನ್ ಕತ್ತಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.