ADVERTISEMENT

ಚಂಪಾಷಷ್ಠಿ ಘಾಟಿ ಕ್ಷೇತ್ರದಲ್ಲಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2019, 15:44 IST
Last Updated 2 ಡಿಸೆಂಬರ್ 2019, 15:44 IST
ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು   

ದೊಡ್ಡಬಳ್ಳಾಪುರ: ತಾಲ್ಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ಸೋಮವಾರ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ನಡೆದವು. ನಾಗಾರಾಧನೆಗೆ ಪ್ರಸಿದ್ದವಾಗಿರುವ ಘಾಟಿ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ಬೆಳಿಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ಭಕ್ತರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು.

ಸಾಮಾನ್ಯವಾಗಿ ಚಂಪಾಷಷ್ಠಿಯಂದು ಸುಬ್ರಹ್ಮಣ್ಯ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಅಶ್ವತ್ಥಕಟ್ಟೆಯಲ್ಲಿ ಸರ್ಪಾಕಾರದ ವಿಗ್ರಹವನ್ನಿಟ್ಟು ಸುಬ್ರಹ್ಮಣ್ಯ ಸ್ವಾಮಿಯನ್ನು ಆವಾಹನೆ ಮಾಡಿ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಅರ್ಪಿಸಿ ಅಂದು ಉಪವಾಸ ವ್ರತ ಆಚರಿಸುವ ಪದ್ಧತಿಯಿದೆ.

ಕುಕ್ಕೆಗೆ ತೆರಳಲು ಸಾಧ್ಯವಾಗದ ಭಕ್ತಾದಿಗಳು ಘಾಟಿ ಕ್ಷೇತ್ರದಲ್ಲಿಯೇ ನಾಗಾರಾಧನೆ ಮಾಡಿ ತಮ್ಮ ಇಷ್ಟಾರ್ಥ ನೆರವೇರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆಯುತ್ತಾರೆ.

ADVERTISEMENT

ರಥೋತ್ಸವಕ್ಕೆ ಸಿದ್ಧತೆ: ಜ. 1ರಂದು ಘಾಟಿ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯಲಿದೆ. ಇದರ ಅಂಗವಾಗಿ ದನಗಳ ಜಾತ್ರೆ ನಡೆಯುತ್ತದೆ. ಇದಕ್ಕಾಗಿ ದೇವಾಲಯದ ವತಿಯಿಂದ ಸಿದ್ಧತೆಗಳು ಆರಂಭವಾಗಿವೆ. ಘಾಟಿ ಕ್ಷೇತ್ರಕ್ಕೆ ಬರುವ ವಾಹನಗಳ 2 ತಿಂಗಳ ಅವಧಿಗೆ ಸುಂಕ ವಸೂಲಾತಿಗಾಗಿ ಹರಾಜು ಪ್ರಕ್ರಿಯೆ ನಡೆದಿದ್ದು ₹ 8.75 ಲಕ್ಷಗಳಿಗೆ ನಾಗರಾಜು ಎಂಬುವವರು ಹಕ್ಕು ಪಡೆದಿದ್ದಾರೆ. ಅಂತೆಯೇ 1 ವರ್ಷದ ಅವಧಿಗೆ ಮುಡಿ ಕೂದಲನ್ನು ಪಡೆಯಲು ಶಂಕರ್ ಎಂಬುವವರು ₹ 1.3 ಲಕ್ಷ ಹರಾಜು ಕೂಗಿದ್ದಾರೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.