ದೊಡ್ಡಬಳ್ಳಾಪುರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ತಾಲ್ಲೂಕಿನಾದ್ಯಂತ ಮುಸ್ಲಿಮರು ಸಡಗರ ಸಂಭ್ರಮದಿಂದ ಆಚರಿಸಿದರು. ಬಕ್ರೀದ್ ಅಂಗವಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಧಾರ್ಮಿಕ ಸಂಪ್ರದಾಯಗಳು ನಡೆದವು.
ನಗರದ ಶಾಂತಿನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮುಸ್ಲಿಂ ಗುರುಗಳಿಂದ ಪ್ರವಚನ ನೀಡಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಅಲ್ಲಾಉದ್ದೀನ್ ಚಿಸ್ತಿ ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮೌಲ್ವಿಗಳ ಧರ್ಮೋಪದೇಶದಂತೆ ಎಲ್ಲರೂ ಸಮಾನ ಚಿಂತನೆ ಮತ್ತು ಸಮಾನ ಬದುಕಿನ ಆಶಯದೊಂದಿಗೆ ಪ್ರಾರ್ಥನೆ ಮಾಡಿದ್ದು ವಿಶೇಷವಾಗಿತ್ತು.
ಮುತ್ತೂರು, ಪಾಲನಜೋಗಿಹಳ್ಳಿ, ತೂಬಗೆರೆ, ದೊಡ್ಡಬೆಳವಂಗಲ, ಕನಸವಾಡಿ, ಬಾಶೆಟ್ಟಿಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲೂ, ಹೋಬಳಿ ಕೇಂದ್ರಗಳಲ್ಲಿರುವ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆದವು. ಪ್ರಾರ್ಥನೆ ನಂತರ ತಮ್ಮ ಶಕ್ಯಾನುಸಾರ ದಾನಕಾರ್ಯ ಮಾಡಿದರು. ಮುಸ್ಲಿಂ ಬಾಂಧವರು ಪರಸ್ಪರ ಆಲಂಗಿಸಿಕೊಂಡು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ದೇವನಲ್ಲಿ ತಮಗಿರುವ ಸತ್ಯನಿಷ್ಠೆಯ ಸಂಕೇತವಾಗಿ ವಿಶ್ವಾದ್ಯಂತ ಮುಸ್ಲಿಮರು ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ. ಅಲ್ಲದೆ ಹಬ್ಬದ ದಿನದಂದು ಶಕ್ತ ಮುಸ್ಲಿಮರು ಕುರಿಯನ್ನು ತ್ಯಾಗ-ಬಲಿದಾನದ ಪ್ರತೀಕವಾಗಿ ಬಲಿ ಕೊಡುವುದು ಹಾಗೂ ಅದರ ಪಾಲನ್ನು ಬಂಧುಬಾಂಧವರು ಹಾಗೂ ನೆರೆಯವರಿಗೆ ಸಮಾನವಾಗಿ ಹಂಚುವ ಸಂಪ್ರದಾಯ ಬೆಳೆದು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.