ವಿಜಯಪುರ: ಎಸ್ಸೆಸ್ಸೆಲ್ಸಿಪರೀಕ್ಷೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಮಾರೇಗೌಡ ಬುಧವಾರ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳ ತಪಾಸಣೆಗಾಗಿ ಸಿದ್ಧಪಡಿಸಿಕೊಂಡಿರುವ ಪೂರ್ವಸಿದ್ಧತೆಗಳು, ಆಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಪರೀಕ್ಷಾ ಕೇಂದ್ರಗಳಿಗೆ ಔಷಧ ಸಿಂಪಡಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು,ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಬರುತ್ತಿದ್ದಂತೆ ಕಡ್ಡಾಯವಾಗಿ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಕೇಂದ್ರದ ಒಳಗೆ ಸುತ್ತಾಡದಂತೆ ಗಮನಹರಿಸಬೇಕು ಎಂದು ಸೂಚಿಸಿದರು.
ನಂತರ ಮಾತನಾಡಿದ ಅವರು, ‘ಜಿಲ್ಲೆಯಲ್ಲಿನ ಎಲ್ಲಾ ತಾಲ್ಲೂಕುಗಳಲ್ಲೂ ಸರ್ಕಾರದ ನಿರ್ದೇಶನದಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯವಾಗಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬಗ್ಗೆ ವಿಶೇಷ ನಿಗಾವಹಿಸಲಾಗುತ್ತದೆ. ಅನಾರೋಗ್ಯಕ್ಕೆ ಒಳಗಾಗಿರುವ ವಿದ್ಯಾರ್ಥಿಗಳಿದ್ದರೆ ಅವರಿಗೆ ಪ್ರತ್ಯೇಕವಾದ ಕೊಠಡಿ ಸಿದ್ಧಗೊಳಿಸಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಇರಲಿದೆ. ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವತ್ಥ ನಾರಾಯಣ, ಉಪಪ್ರಾಂಶುಪಾಲ ಪಿ.ವೆಂಕಟೇಶ್, ಮುಖ್ಯಅಧೀಕ್ಷಕ ಕೃಷ್ಣಮೂರ್ತಿ, ಪಿ.ಎಂ.ಕೊಟ್ರೇಶ್, ಮುಖ್ಯಶಿಕ್ಷಕರು ಇದ್ದರು.
ವಿದ್ಯಾರ್ಥಿಗಳಿಗೆ ನಿಗದಿ ಪಡಿಸಿದ್ದ ಕೊಠಡಿಗಳ ಕುರಿತು ಮಾಹಿತಿ ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು. ಕೊಠಡಿಗಳ ವೀಕ್ಷಣೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.