ದೊಡ್ಡಬಳ್ಳಾಪುರ: ಹೈದರಾಬಾದ್ನಲ್ಲಿ ಇತ್ತೀಚೆಗೆ ನಡೆದ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ನಾಗರಿಕ ಸಮಾಜ ತಲೆತಗ್ಗಿಸುವಂತಹ ಸಂಗತಿಯಾಗಿದೆ. ಇಂತಹ ಪ್ರಕರಣಗಳು ದೇಶದಲ್ಲಿ ಮರುಕಳಿಸದಂತೆ ತಡೆಯಲು ಕಠಿಣವಾದ ಕಾನೂನು ಜಾರಿಗೆ ತರಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಸುಭಾಷ್ ಆಗ್ರಹಿಸಿದರು.
ಅವರು ಗುರುವಾರ ನಗರದ ಬಸವ ಭವನದ ಸಮೀಪ ಲಾವಣ್ಯ ಶಾಲೆ, ಕಾಲೇಜು ವಿದ್ಯಾರ್ಥಿಗಳ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ದೆಹಲಿಯಲ್ಲಿ ನಿರ್ಭಯ ಮೇಲಿನ ಹತ್ಯಾಚಾರಿಗಳಿಗೆ ತ್ವರಿತವಾಗಿ ಶಿಕ್ಷೆಯಾಗಿದ್ದರೆ ಇಂತಹ ಪ್ರಕರಣಗಳು ಮರುಕಳಿಸುತ್ತಿರಲಿಲ್ಲ. ದೇಶದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವ ನಿಟ್ಟಿನಲ್ಲಿ ಹೊಸ ಯೋಜನೆ, ಕಾನೂನು ಜಾರಿಯಾಗಬೇಕಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಲೇ ಇವುಗಳಲ್ಲಿ ಬೆಳಕಿಗೆ ಬರುತ್ತಿರುವ ಪ್ರಕರಣಗಳು ಕೆಲವಷ್ಟೇ ಎಂದರು.
ಹೈದರಾಬಾದ್ ಹತ್ಯೆ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಮಹಿಳೆಯರ ಮೇಲಿನ ಹತ್ಯಾಚಾರದಂತಹ ಪ್ರಕರಣಗಳ ವಿಚಾರಣೆಗಾಗಿಯೇ ವಿಶೇಷ ನ್ಯಾಯಾಲಯ ಸ್ಥಾಪನೆಯಾಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಮುಖಂಡ ವಿನಯ್ಚಂದ್ರ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.