ದೇವನಹಳ್ಳಿ: ಪ್ರಜಾಸತ್ತಾತ್ಮಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಮತದಾರರು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಲಹೆ ನೀಡಿದರು.
ಇಲ್ಲಿನ ಸರ್ಕಾರಿ ಕಿರಿಯ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಸಹಯೋಗದಲ್ಲಿ ನಡೆದ ಮೂರು ದಿನಗಳ ಮಿಂಚಿನ ನೋಂದಣಿಗೆ ಚಾಲನೆ ನೀಡಿ ಮಾತನಾಡಿದರು.
ಜ.6ರಿಂದ 8ರವರೆಗೆ ಎಲ್ಲ ಕಡೆ ಬೂತ್ಮಟ್ಟದಲ್ಲಿ ನೂತನ ಮತದಾರರಿಗೆ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2020 ಜ.1ಕ್ಕೆ 18ವರ್ಷ ತುಂಬಿರುವ ಯುವಕ – ಯುವತಿಯರಿಗೆ ನೋಂದಣಿಗೆ ಅವಕಾಶವಿದೆ. ನಮೂನೆ 6ರಲ್ಲಿ ಅರ್ಜಿ ಸಲ್ಲಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯುತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಗುರುತರ ಜವಾಬ್ದಾರಿ ಪ್ರತಿಯೊಬ್ಬ ಮತದಾರರಿಗೆ ಇದೆ. ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ, ವಿಧಾನಸಭೆ ಮತ್ತು ಲೋಕಸಭೆಗೆ ಸಂವಿಧಾನಬದ್ಧವಾಗಿ ಆಯ್ಕೆ ಮಾಡಲು ಮತದಾನ ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಮರಣ ಹೊಂದಿದವರ ಹೆಸರು ಪಟ್ಟಿಯಿಂದ ಕೈಬಿಡಲು ಅರ್ಜಿ ನೀಡಬೇಕು. ಮೂರು ದಿನಗಳ ಮಿಂಚಿನ ನೋಂದಣಿ ಪ್ರತಿ ಬೂತ್ಮಟ್ಟದಲ್ಲಿ ಬೆಳಿಗ್ಗೆ 9:30ರಿಂದ ಸಂಜೆ 6ರವರೆಗೆ ನಡೆಯಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿರುವ ಪ್ರತಿ ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನೋಂದಣಿ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ವಿಳಾಸ ಮತ್ತು ವಯಸ್ಸಿನ ದೃಢೀಕರಣ, ಒಂದು ಪಾಸ್ ಪೋರ್ಟ್ ಅಳತೆ ಭಾವಚಿತ್ರ ಇದ್ದರೆ ಸಾಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಮತ್ತು ಕುಟುಂಬದ ಸದಸ್ಯರ ಹೆಸರು ಇದೆಯೇ ಇಲ್ಲವೇ ಎಂಬುದರ ಬಗ್ಗೆ ಖಾತರಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ತಹಶೀಲ್ದಾರ್ ಅಜಿತ್ ಕುಮಾರ್ ರೈ, ಚುನಾವಣಾ ಶಿರಸ್ತೇದಾರ್ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿದೇವಿ, ರಾಜಸ್ವ ನಿರೀಕ್ಷಕ ಚಂದ್ರಶೇಖರ್, ಪ್ರಾಂಶುಪಾಲರಾದ ಸುರೇಖಾ ಮೋಹನ ಕತ್ತಿ, ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.