ಹೊಸಕೋಟೆ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದೊಂದು ತಿಂಗಳಿಂದ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲವೆಂದು ಆರೋಪಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ), ಡೆಮೊಕ್ರೆಟಿಕ್ ಯೂತ್ ಫೆಡರೇಷನ್ ಆಪ್ ಇಂಡಿಯಾ(ಡಿವೈಎಫ್ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾಲೇಜಿನಿಂದ ತಹಶೀಲ್ದಾರ್ ಕಚೇರಿ ವರೆಗೆ ಜಾಥಾ ನಡೆಸಿ ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಉಪತಹಶೀಲ್ದಾರ್ ರಾಜುಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಒಂದೂವರೆ ತಿಂಗಳಿಂದ ಸರಿಯಾಗಿ ತರಗತಿಗಳೇ ನಡೆಯುತ್ತಿಲ್ಲ. ದಿನಕ್ಕೆ ಒಂದು ಇಲ್ಲವೇ ಎರಡು ತರಗತಿ ಮಾತ್ರ ನಡೆಯುತ್ತಿದೆ. ತರಗತಿ ನಡೆಯದೆ ಪಠ್ಯಕ್ರಮ ಪೂರ್ಣಗೊಂಡಿಲ್ಲ. ಮುಂದಿನ ತಿಂಗಳೇ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಹೇಗೆ ಎದುರಿಸಬೇಕೆಂಬುದೇ ತಿಳಿಯುತ್ತಿಲ್ಲ. ಕಡಿಮೆ ಅಂಕಗಳಿಸಿದರೆ ಯಾರು ಜವಾಬ್ದಾರರು ಎಂದು ತೃತೀಯ ಬಿಬಿಎ ವಿದ್ಯಾರ್ಥಿನಿ ವೆನ್ನೆಲ್ಲಾ ಅಸಮಾಧಾನಿತ ಧ್ವನಿಯಲ್ಲಿ ವಿದ್ಯಾರ್ಥಿಗಳು ಪ್ರಶ್ನಿಸಿದರು.
ಶೀಘ್ರದಲ್ಲೇ ಅತಿಥಿ ಉಪನ್ಯಾಸಕರನ್ನು ಸೇವೆಗೆ ತೆಗೆದುಕೊಳ್ಳಬೇಕು. ಇಲ್ಲವೇ ತಾಲೂಕು ಕಾರ್ಯಾಲಯದ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ವಕೀಲ ಹರೀಂದ್ರ ಎಚ್ಚರಿಕೆ ನೀಡಿದರು.
ಪ್ರತಿಭಟನನಿರತ ವಿದ್ಯಾರ್ಥಿಗಳು ತಹಶೀಲ್ದಾರ್ ಅವರನ್ನು ಭೇಟಿಯಾಗಿ ಸಮಸ್ಯೆಗಳನ್ನು ಹೇಳಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಸೋಮಶೇಖರ್, ‘ಅತಿಥಿ ಉಪನ್ಯಾಸಕರ ಸಮಸ್ಯೆ ನ್ಯಾಯಾಲಯದಲ್ಲಿರುವ ಕಾರಣ ಏನು ಮಾಡಲು ಆಗುತ್ತಿಲ್ಲ. ನಿಮ್ಮ ಮನವಿ ಪತ್ರವನ್ನು ಶೀಘ್ರವೇ ಜಿಲ್ಲಾಧಿಕಾರಿಗಳಿಗೆ ತಲುಪಿಸಿ, ಪ್ರಾಮಾಣಿಕವಾಗಿ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು. ನಾಳೆಯ ನಿಮ್ಮ ಕಾಲೇಜಿಗೆ ಭೇಟಿ ನೀಡಿ ನಿಮ್ಮ ಸಮಸ್ಯೆ ಅಲಿಸಿ ಬಗೆಹರಿಸುವ ಕೆಲಸ ಮಾಡುವೆ ಎಂದು ಭರವಸೆ ನೀಡಿದರು.
ಎಸ್ಎಫ್ಐ ಮುಖಂಡ ನಟರಾಜ್, ಮುಖಂಡರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಸರ್ಕಾರಿ ಕಾಲೇಜುಗಳೆಂದರೆ ಬಡವರ ಮಕ್ಕಳು ಇರುವ ಕಾಲೇಜು ಎಂದು ಸರ್ಕಾರ ನಿರ್ಲಕ್ಷ್ಯ ತೋರುತಿರುವಂತೆ ಕಾಣುತ್ತಿದೆ. ಸೌಲಭ್ಯ ಕೊಡದಿದ್ದರೂ ಪರವಾಗಿಲ್ಲ. ಸರಿಯಾದ ಸಮಯಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿ.– ನಿತಿನ್, ವಿದ್ಯಾರ್ಥಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.