ADVERTISEMENT

ಸದಸ್ಯತ್ವ ನೋಂದಣಿ ಹೆಚ್ಚಳಕ್ಕೆ ಸಲಹೆ

ಆನೇಕಲ್‌: ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 5:54 IST
Last Updated 25 ಜನವರಿ 2023, 5:54 IST
ಆನೇಕಲ್‌ನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ್ದ ವಿಜಯ ಸಂಕಲ್ಪ ಅಭಿಯಾನ ಮತ್ತು ಸದಸ್ಯತ್ವ ನೋಂದಣಿಗೆ ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜು ಗೌಡ ಚಾಲನೆ ನೀಡಿದರು
ಆನೇಕಲ್‌ನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ್ದ ವಿಜಯ ಸಂಕಲ್ಪ ಅಭಿಯಾನ ಮತ್ತು ಸದಸ್ಯತ್ವ ನೋಂದಣಿಗೆ ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜು ಗೌಡ ಚಾಲನೆ ನೀಡಿದರು   

‌ಆನೇಕಲ್: ಬಿಜೆಪಿ ಯುವ ಮೋರ್ಚಾದಿಂದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಪಟ್ಟಣದಲ್ಲಿ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಲಾಯಿತು. ವಾಹನಗಳಿಗೆ ಸ್ಟಿಕ್ಕರ್‌ ಅಂಟಿಸುವ ಮತ್ತು ಡಿಜಿಟಲೀಕರಣದ ಮೂಲಕ ಸದಸ್ಯರ ನೋಂದಣಿ ಕಾರ್ಯ ನಡೆಯಿತು.

ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜು ಗೌಡ ಮಾತನಾಡಿ, ಪ್ರಪಂಚದಲ್ಲಿಯೇ ಅತಿಹೆಚ್ಚು ಸದಸ್ಯರಿರುವ ಪಕ್ಷ ಬಿಜೆಪಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಸ್ನೇಹಿ ಕಾರ್ಯಕ್ರಮಗಳ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿವೆ. ಶಿಕ್ಷಣ, ಗ್ರಾಮೀಣಾಭಿವೃದ್ಧಿ, ನೀರಾವರಿ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸೇರಿದಂತೆ ವಿವಿಧ ಕಾರ್ಯಕ್ರಮದ ಮೂಲಕ ಬಲಿಷ್ಠ ಭಾರತ ಕಟ್ಟಲು ಮತ್ತು ವಿಶ್ವದಲ್ಲಿಯೇ ಭಾರತಕ್ಕೆ ಅಗ್ರಸ್ಥಾನ ದೊರೆಯಲು ಶ್ರಮಿಸಿವೆ ಎಂದು
ಹೇಳಿದರು.

ಬಿಜೆಪಿ ಸದಸ್ಯರಾಗುವುದು ದೇಶದ ಹೆಮ್ಮೆ. ಜನರೊಂದಿಗೆ ಉತ್ತಮ ಸಂಪರ್ಕ ಸಾಧಿಸಿ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು. ಬೂತ್‌ ಮಟ್ಟದಿಂದ ಪಕ್ಷ ಸಂಘಟಿಸಬೇಕು. ಸದಸ್ಯತ್ವ ನೋಂದಣಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಬೇಕಿದೆ ಎಂದು ತಿಳಿಸಿದರು.

ADVERTISEMENT

ಮುಖಂಡ ಕೆ. ಶಿವರಾಮು ಮಾತನಾಡಿ, ಯುವಕರು, ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಹಲವಾರು ಕಾರ್ಯಕ್ರಮಗಳನ್ನು ಪಕ್ಷ ರೂಪಿಸಿದೆ. ಎಲ್ಲಾ ಕಾರ್ಯಕ್ರಮಗಳು ಜನಸ್ನೇಹಿಯಾಗಿವೆ. ಸದಾ ಜನರ ಮನಸ್ಸಿನಲ್ಲಿ ಉಳಿಯುತ್ತವೆ. ಭಾರತವನ್ನು ಸ್ವಾಭಿಮಾನಿ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆತ್ಮ ನಿರ್ಭರ ಪರಿಕಲ್ಪನೆ ರೂಪಿಸಿದೆ ಎಂದು ತಿಳಿಸಿದರು.

ಆನೇಕಲ್‌ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಘು ಮಾತನಾಡಿ, ಆನೇಕಲ್‌ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ವಿಧಾನಸಭಾ ಚುನಾವಣೆ ಸಮೀಪದಲ್ಲಿದೆ. ಹಾಗಾಗಿ, ಕಾರ್ಯಕರ್ತರು ಪಕ್ಷ ಸಂಘಟಿಸಿ ಚುನಾವಣೆಗೆ ಸಿದ್ಧರಾಗಬೇಕು. ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಹಾಪ್‌ಕಾಮ್ಸ್‌ ನಿರ್ದೇಶಕ ಜೆ. ನಾರಾಯಣಪ್ಪ, ಪುರಸಭಾ ಸದಸ್ಯರಾದ ಸುರೇಶ್‌, ಮುರಳಿ, ರಂಗಸ್ವಾಮಿ, ಮುಖಂಡರಾದ ಟಿ.ಬಿ. ಬಾಬು, ಹುಲ್ಲಹಳ್ಳಿ ಶ್ರೀನಿವಾಸ್‌, ಬಿ.ವೈ. ರವಿಚಂದ್ರ, ವೆಂಕಟಸ್ವಾಮಿ, ರವಿರೆಡ್ಡಿ, ಕೀರ್ತಿ, ಕಿರಣ್‌, ಜಯದೇವ್‌, ರಾಕೇಶ್‌, ರಘು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.