ಹೊಸಕೋಟೆ: ತಾಲ್ಲೂಕಿನ 26 ಗ್ರಾಮ ಪಂಚಾಯತಿಗೆ ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಂದಿದ್ದು ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿದ್ದಾರೆ.
ನಗರದ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಯಿತು. ಪ್ರತಿ ಪಂಚಾಯಿತಿಯ ಎರಡು ಗ್ರಾಮಗಳ ಮತಗಳನ್ನು ಎಣಿಕೆಗೆ ತೆಗೆದುಕೊಂಡಿದ್ದು ಎಲ್ಲಾ ಗ್ರಾಮಗಳ ಎಣಿಕೆ ತಡವಾಗಿದೆ. ಬೆಳಿಗ್ಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾಲೇಜಿನ ಮೈದಾನದಲ್ಲಿ ಜಮಾಯಿಸಿ ತಮ್ಮ ನಾಯಕರ ಹಣೆಬರಹವನ್ನು ತಿಳಿಯಲು ಕಾತರರಾಗಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿದ ಶಾಸಕ ಶರತ್ ಬಚ್ಚೇಗೌಡ ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಎಂ.ಟಿ.ಬಿ. ನಾಗರಾಜ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮೇಲೆ ನಾಯಕರ ಕೊರತೆ ಎದುರಿಸುತ್ತಿತ್ತು.
ಈ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡ ಪರಿಣಾಮವಾಗಿ ಬಹುತೇಕ ಪಂಚಾಯಿತಿಗಳಲ್ಲಿ ಶರತ್ ಬಚ್ಚೇಗೌಡರ ಬೆಂಬಲಿತ ಆಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಸುಮಾರು 20ಕ್ಕಿಂತ ಹೆಚ್ಚಿನ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲಿದ್ದೇವೆ ಎಂದು ಅವರ ಬೆಂಬಲಿಗರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.