
ತೂಬಗೆರೆ(ದೊಡ್ಡಬಳ್ಳಾಪುರ): ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಬಿಎಂಎಸ್ ಕಾನೂನು ಮಹಾವಿದ್ಯಾಲಯ ವತಿಯಿಂದ ರಾಷ್ಟ್ರೀಯ ಯೋಜನಾ ಶಿಬಿರದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು.
ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ದಾಸರಿ ಕ್ರಾಂತಿ ಕಿರಣ್ ಮಾತನಾಡಿ, ‘ಸಮಾಜದಲ್ಲಿ ನೊಂದ ಜನರಿಗೆ ನ್ಯಾಯ ಒದಗಿಸುವಲ್ಲಿ ವಕೀಲ ವೃತ್ತಿಯು ಮಹತ್ವದ್ದಾಗಿದ್ದು, ವೃತ್ತಿಯ ಘನತೆ ಎತ್ತಿ ಹಿಡಿಯಬೇಕಾದ ಹೊಣೆಗಾರಿಕೆ ಕಾನೂನು ವಿದ್ಯಾರ್ಥಿಗಳ ಮೇಲಿದೆ’ ಎಂದು ಹೇಳಿದರು.
ಕಾನೂನಿನ ಬಗ್ಗೆ ಎಲ್ಲರಿಗೂ ಗೌರವ ಇರಬೇಕು. ಕಾನೂನು ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುತ್ತದೆ. ಕಾನೂನು ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗಬೇಕು. ಸಮಾಜದಲ್ಲಿ ನೊಂದ ವರ್ಗದವರಿಗೆ ರಕ್ಷಣೆ ಕೊಡುವಲ್ಲಿ ನ್ಯಾಯಾಲಯಗಳು ಮಹತ್ತರ ಪಾತ್ರ ನಿರ್ವಹಿಸುತ್ತಿವೆ. ಅಲ್ಲದೆ, ಕಾನೂನಿನ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್.ಆರ್.ಜೆ.ಎಸ್, ಸಮಾಜದಲ್ಲಿ ವಕೀಲ ವೃತ್ತಿ ಬಹಳಷ್ಟು ಗೌರವ ಸ್ಥಾನ ಪಡೆದಿದೆ. ಇದಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕಾದ ಹೊಣೆಗಾರಿಕೆ ವಕೀಲರಿಗಿದೆ. ನ್ಯಾಯ ಅರಸಿ ಬರುವವರಿಗೆ ನ್ಯಾಯ ದೊರಕಿಸಿಕೊಡುವ ಕಾರ್ಯ ಮಾಡಬೇಕು ಎಂದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರೇಣುಕಾಮೂರ್ತಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಅನಿತಾ.ಎಫ್.ಎನ್ ಡಿಸೋಜ ವಹಿಸಿದ್ದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ. ಕನಕರಾಜ್, ಉಪಾಧ್ಯಕ್ಷ ಜಗನ್ನಾಥ್, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ, ಖಜಾಂಚಿ ಗೀತಾ ಇದ್ದರು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.