ಆನೇಕಲ್:ತಾಲ್ಲೂಕಿನ 13 ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್ಗಳನ್ನು ಗುರುತಿಸಿ ಅವರಿಗೆ ಆಹಾರ ಮತ್ತು ಮೆಡಿಕಲ್ ಕಿಟ್ಗಳನ್ನು ನೀಡುವ ಮೂಲಕ ಅವರ ಸೇವೆಗೆ ಕೃತಜ್ಞತೆ ಸಲ್ಲಿಸಲಾಗಿದೆ ಎಂದು ಶಿವನಹಳ್ಳಿ ರಾಮಕೃಷ್ಣ ಆಶ್ರಮದ ಸ್ವಾಮಿ ವಿಷ್ಣುಮಯಾನಂದ ಜೀ ತಿಳಿಸಿದರು.
ತಾಲ್ಲೂಕಿನ ಬಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಳ್ಳೂರು ಮತ್ತು ಮಾಯಸಂದ್ರ ಗ್ರಾಮ ಪಂಚಾಯಿತಿಯ ಕೊರೊನಾ ವಾರಿಯರ್ಸ್ಗೆ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು.
ಕೊರೊನಾ ಸೋಂಕು ಗ್ರಾಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಪ್ರತಿಯೊಬ್ಬರು ಆತಂಕಪಡುವ ಇಂದಿನ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಕೊರೊನಾ ವಾರಿಯರ್ಸ್ ಮನೆ ಮನೆಗಳಿಗೆ ಭೇಟಿ ನೀಡಿ ಸೋಂಕಿತರಲ್ಲಿ ಧೈರ್ಯ ತುಂಬುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ಅತ್ತಿಬೆಲೆ ಸರ್ಕಲ್ ಇನ್ಸ್ಪೆಕ್ಟರ್ ಕೆ. ವಿಶ್ವನಾಥ್ ಮಾತನಾಡಿ, ಲಾಕ್ಡೌನ್ ಸಂದರ್ಭದಲ್ಲಿ ಶಿವನಹಳ್ಳಿ ರಾಮಕೃಷ್ಣ ಆಶ್ರಮದ ಸ್ವಾಮೀಜಿ ಅವರು ಇನ್ಫೊಸಿಸ್ ಪ್ರತಿಷ್ಠಾನದ ನೆರವಿನೊಂದಿಗೆ ತಾಲ್ಲೂಕಿನ ಮೂರು ಸಾವಿರಕ್ಕೂ ಹೆಚ್ಚು ಕೊರೊನಾ ವಾರಿಯರ್ಸ್ಗೆ ಆಹಾರದ ಕಿಟ್ ನೀಡಿದ್ದಾರೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ಸುಮಾರು 2,500 ಮಂದಿ ಅಂಗವಿಕಲರಿದ್ದಾರೆ. ಅವರಿಗೆ ಆಹಾರ ಕಿಟ್ ನೀಡಬೇಕೆಂಬ ಉದ್ದೇಶವಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಬಳ್ಳೂರು ಗ್ರಾ.ಪಂ. ಅಧ್ಯಕ್ಷ ಜಿ. ನಾರಾಯಣರೆಡ್ಡಿ, ಉಪಾಧ್ಯಕ್ಷೆ ವಿಜಿಯಮ್ಮ, ಮಾಯಸಂದ್ರ ಗ್ರಾ. ಪಂ. ಅಧ್ಯಕ್ಷೆ ಭಾಗ್ಯಾ ಜಯಕುಮಾರ್, ಉಪಾಧ್ಯಕ್ಷ ಪ್ರವೀಣ್, ಬಳ್ಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯರಾಮ್, ಕಾರ್ಯದರ್ಶಿ ಮಂಜುನಾಥ್, ಅತ್ತಿಬೆಲೆ ಸಬ್ ಇನ್ಸ್ಪೆಕ್ಟರ್ ಮುರಳಿ, ಬಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸವಿತಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.