ADVERTISEMENT

ಮೂರನೇ ಅಲೆ ತಡೆಗೆ ಮುಂಜಾಗ್ರತೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 5:04 IST
Last Updated 3 ಆಗಸ್ಟ್ 2021, 5:04 IST
ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಪುರಸಭಾ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್ ಚಾಲನೆ ನೀಡಿದರು
ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಪುರಸಭಾ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್ ಚಾಲನೆ ನೀಡಿದರು   

ವಿಜಯಪುರ:ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಮೂರನೇ ಅಲೆಯ ಸ್ವರೂಪ ಗಂಭೀರವಾಗುತ್ತಿದೆ. ಎರಡೂ ರಾಜ್ಯಗಳ ಗಡಿಗಳಲ್ಲಿ ಸರ್ಕಾರ ಕಟ್ಟೆಚ್ಚರವಹಿಸಿದ್ದು, ಜನರು ಮೈಮರೆಯದಂತೆ ಜಾಗ್ರತೆವಹಿಸಬೇಕು. ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ನಿರ್ಭಿತಿಯಿಂದ ಲಸಿಕೆ ಪಡೆದುಕೊಳ್ಳುವ ಮೂಲಕ ಕೋವಿಡ್ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಲಸಿಕೆಯಿಂದ ಅಡ್ಡ ಪರಿಣಾಮಗಳಾಗುತ್ತವೆ ಎನ್ನುವ ಭಯ ಇನ್ನೂ ಸ್ವಲ್ಪಮಟ್ಟಿಗೆ ಜನರಲ್ಲಿದೆ. ಅದನ್ನು ಹೋಗಲಾಡಿಸಬೇಕಾಗಿದೆ ಎಂದರು.

ADVERTISEMENT

ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ಯಾಂಸುಂದರ್ ಮಾತನಾಡಿ, ಇಂದು 350 ಮಂದಿಗೆ ಲಸಿಕೆ ಬಂದಿದೆ. ನಮೂನೆ-3ರನ್ನು ಹೊರತುಪಡಿಸಿ 18 ವರ್ಷ ಮೇಲ್ಪಟ್ಟವರು ಯಾರೇ ಬಂದರೂ ಲಸಿಕೆ ಹಾಕಲಾಗುತ್ತಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ನೂರಾರು ಮಂದಿ ಸಾಲಿನಲ್ಲಿ ನಿಂತು ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆದುಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಾ.ಉದಯ್ ಕುಮಾರ್, ಫಾರ್ಮಾಸಿಸ್ಟ್ ಕುಮುದಾ, ಪವಿತ್ರಾ, ಕಲಾವತಿ, ಸುಮಾ, ರಿಜ್ವಾನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.