ADVERTISEMENT

ವಿಜಯಪುರ: ಮೂವರು ಬಾಲಕಾರ್ಮಿಕರ ರಕ್ಷಣೆ

ಬೂದಿಗೆರೆ ಗ್ರಾಮದ ಗ್ಯಾರೇಜ್‌ ಮೇಲೆ ಅಧಿಕಾರಿಗಳ ನೇತೃತ್ವದ ತಂಡ ದಾಳಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 1:55 IST
Last Updated 5 ನವೆಂಬರ್ 2020, 1:55 IST
ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮದಲ್ಲಿ ಬಾಲಕಾರ್ಮಿಕ ರಕ್ಷಣಾ ಕಾಯ್ದೆ ಬಗ್ಗೆ ಅಧಿಕಾರಿಗಳು ಕರಪತ್ರದ ಮೂಲಕ ಅರಿವು ಮೂಡಿಸಿದರು
ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮದಲ್ಲಿ ಬಾಲಕಾರ್ಮಿಕ ರಕ್ಷಣಾ ಕಾಯ್ದೆ ಬಗ್ಗೆ ಅಧಿಕಾರಿಗಳು ಕರಪತ್ರದ ಮೂಲಕ ಅರಿವು ಮೂಡಿಸಿದರು   

ವಿಜಯಪುರ: ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆಯ ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಮೂವರು
ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಮಕ್ಕಳ ಸಹಾಯವಾಣಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸರ್ವೋದಯ ಸಂಸ್ಥೆಯ ತಂಡದ ಸದಸ್ಯರು ದಾಳಿ ನಡೆಸಿ ಮಕ್ಕಳನ್ನು ರಕ್ಷಿಸಿದ್ದಾರೆ.

ಮಾರುತಿ ಮೋಟಾರ್ಸ್ ಬೈಕ್ ಗ್ಯಾರೇಜ್ ಮತ್ತು ಮರ್ಧಾನ್ ಎಂಜಿನಿಯರಿಂಗ್ ವರ್ಕ್ಸ್ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿತು. ಮಕ್ಕಳನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿ ಸರ್ವೋದಯ ಸಂಸ್ಥೆಯ ವಶಕ್ಕೆ ನೀಡಲಾಗಿದೆ.

ADVERTISEMENT

ಕೊರೊನಾ ಸೋಂಕಿನ ಪರಿಣಾಮ ಶಾಲೆಗಳು ಆರಂಭವಾಗಿಲ್ಲ. ಇದರಿಂದ ಮಕ್ಕಳು ಹೊರಗೆ ಸುತ್ತಾಡುತ್ತಾರೆ ಎನ್ನುವ ಕಾರಣದಿಂದ ನಾವು ಕೆಲಸ ಮಾಡುವ ಕಡೆಯಲ್ಲಿ ಇಟ್ಟುಕೊಂಡಿದ್ದೇವೆಯೇ ಹೊರತು ಅವರಿಂದ ದುಡಿಸಿಕೊಳ್ಳುತ್ತಿಲ್ಲ. ಯಾವುದೇ ಕಾರಣಕ್ಕೂ ಮಕ್ಕಳನ್ನು ಕರೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಪೋಷಕರು ಸೇರಿದಂತೆ ಸ್ಥಳೀಯರು ಅಧಿಕಾರಿಗಳಿಗೆ ಅಡ್ಡಿಪಡಿಸಿದರು. ಈ ವೇಳೆ ಅಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿಯೂ ನಡೆಯಿತು. ನಂತರ ಸ್ಥಳೀಯರ ಮನವೊಲಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳು ಮಕ್ಕಳನ್ನು ರಕ್ಷಣೆ ಮಾಡಿದರು.

‘ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸಿದರೆ ಕಾನೂನಿನಡಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈ ಕುರಿತು ಗ್ಯಾರೇಜ್‌ಗಳಿಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಗುವುದು. ಬಾಲಕಾರ್ಮಿಕರನ್ನು ಕಂಡಾಗ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಲು ನಾಗರಿಕರು ಮುಂದಾಗಬೇಕು’ ಎಂದುಕೋರಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹೇಮಾವತಿ, ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್, ಕಾರ್ಯಕ್ರಮ ಅಧಿಕಾರಿ ಸಣ್ಣ ಕರಿಯಪ್ಪ, ಕಾರ್ಮಿಕ ಇಲಾಖೆಯ ನಿರೀಕ್ಷಕಿ ಅಂಬಿಕಾ, ಮಕ್ಕಳ ಸಹಾಯವಾಣಿ ತಂಡದ ಸದಸ್ಯ ಮುರಳಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಗೋಪಾಲ ರೆಡ್ಡಿ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಲೋಕೇಶ್‌ ಕೆ., ಮುಖ್ಯಶಿಕ್ಷಕ ಬ್ರಹ್ಮಾನಂದ್, ಪೊಲೀಸ್ ಕಾನ್‌ಸ್ಟೆಬಲ್ ಸಾಬಣ್ಣ, ಸರ್ವೋದಯ ಸರ್ವಿಸ್ ಸೊಸೈಟಿಯ ಸಂಯೋಜಕ ಹರೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.