ಆನೇಕಲ್: ವೀರಶೈವ ಲಿಂಗಾಯತ ಸಮುದಾಯದಲ್ಲಿನ ಒಳಪಂಗಡಗಳು ಒಂದಾಗಬೇಕು. ಪರಸ್ಪರ ಸಾಮರಸ್ಯ ದಿಂದ ಸಮಾಜ ಕಟ್ಟುವ ಕಾರ್ಯದಲ್ಲಿ ಭಾಗಿಗಳಾಗಬೇಕು ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಅವರು ತಿಳಿಸಿದರು.
ಅವರು ತಾಲ್ಲೂಕಿನ ಚಂದಾಪುರದಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ಆನೇಕಲ್ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ಧರ್ಮಜಾಗೃತಿ ಸಮಾವೇಶ ಮತ್ತು ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೀರಶೈವ ಲಿಂಗಾಯತ ಸಮುದಾಯದಲ್ಲಿ ಸುಮಾರು 102ಕ್ಕೂ ಹೆಚ್ಚು ಒಳಪಂಗಡಗಳಿವೆ. ಈ ಪಂಗಡಗಳ ನಡುವೆ ವೈವಾಹಿಕ ಸಂಬಂಧ ಬೆಳೆಸಬೇಕು. ಈ ಮೂಲಕ ಪರಸ್ಪರ ಒಗ್ಗೂಡಬೇಕು. ವೀರಶೈವ ಲಿಂಗಾಯತ ನಡುವೆ ಯಾವುದೇ ಬೇಧವಿಲ್ಲ. ಎರಡು ಸಹ ಒಂದೇ. ಹಾಗಾಗಿ ಸಮಾಜದ ಎಲ್ಲರೂ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿನ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನೆರವಾಗಬೇಕು. ಸಮುದಾಯದಲ್ಲಿನ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತವಾಗಬಾರದು.ಆಯಾ ಭಾಗದಲ್ಲಿನ ಸಂಘ ಸಂಸ್ಥೆಗಳು ನೆರವಾಗುವ ಮೂಲಕ ಶಿಕ್ಷಣ ನೀಡಲು ಕೊಡುಗೆ ನೀಡಬೇಕು. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಮೂಲಕ ಸಮಾಜದ ಸಮಸ್ಯೆಗಳನ್ನು ಅರಿತು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದರು.
ಬೆಂಗಳೂರು ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಧಿಕಾರದ ಅಧ್ಯಕ್ಷ ಎಂ.ಜಯದೇವ್ ಮಾತನಾಡಿ, ಸಮಾಜದ ಅಭಿವೃದ್ಧಿ ಪ್ರತಿಯೊಬ್ಬರು ಗುರಿಯಾಗಿಸಿಕೊಂಡು ಕೆಲಸ ಮಾಡಬೇಕಾಗಿದೆ. ಬಿಜೆಪಿ ಯುವ ಮುಖಂಡ ಬಿ.ವೈ.ವಿಜಯೇಂದ್ರ ಅವರು ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಯಾಗುವ ಭರವಸೆ ಇದೆ. ಹಾಗಾಗಿ ಸಮಾಜ ಒಗ್ಗೂಡಿ ಅವರನ್ನು ಬೆಂಬಲಿಸಬೇಕಾಗಿದೆ ಎಂದು ಅವರು ಹೇಳಿದರು.
ರಾಜಾಪುರ ಸಂಸ್ಥಾನ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಗುಮ್ಮಳಾಪುರ ಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ.ಮರಿಸ್ವಾಮಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ರುದ್ರೇಶ್, ಆನೇಕಲ್ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಜಯಣ್ಣ, ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬಿ.ಎಸ್.ನೀಲಕಂಠಯ್ಯ, ಕಾರ್ಯಾಧ್ಯಕ್ಷ ಅರುಣ್, ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕ ರೇಣುಕಾರಾಧ್ಯ, ಮುಖಂಡರಾದ ಹಿನ್ನಕ್ಕಿ ಜಯಣ್ಣ, ಮಹೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.