ADVERTISEMENT

ಖಿನ್ನತೆ ನಿವಾರಣೆಗೆ ತಜ್ಞರ ಸಲಹೆ ಅವಶ್ಯ

ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ: ಕಸಾಪ ಜಿಲ್ಲಾಧ್ಯಕ್ಷ ಚಿ.ಮಾ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 13:08 IST
Last Updated 16 ಸೆಪ್ಟೆಂಬರ್ 2020, 13:08 IST
ಚಿ.ಮಾ.ಸುಧಾಕರ್ 
ಚಿ.ಮಾ.ಸುಧಾಕರ್    

ವಿಜಯಪುರ: ಇತ್ತೀಚಿನ ವರ್ಷಗಳಲ್ಲಿ ಯುವ ಪೀಳಿಗೆಯಲ್ಲಿ ಆತ್ಮಹತ್ಯೆ ಪ್ರವೃತ್ತಿ ಹೆಚ್ಚುತ್ತಿದೆ. ಯುವ ಪೀಳಿಗೆಯು ದೇಶದ ಆಸ್ತಿ ಎಂಬುದನ್ನು ಮನವರಿಕೆ ಮಾಡಿಕೊಟ್ಟು ಆತ್ಮಹತ್ಯೆಯನ್ನು ತಡೆಯಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್ ಹೇಳಿದರು.

ಇಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿ ಜಯಿಸಬೇಕು.  ಆತ್ಮಹತ್ಯೆಯು ಸ್ವಯಂಕೃತ ಅಪರಾಧವಾಗಿದ್ದು, ಈ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿವಳಿಕೆ ಹೇಳಬೇಕು ಎಂದು ತಿಳಿಸಿದರು.

ಮಾನಸಿಕ ಖಿನ್ನತೆಗೊಳಗದಾವರು ತಜ್ಞರಿಂದ ಸೂಕ್ತ ಸಲಹೆ ಪಡೆಯಬೇಕು. ಯಾವುದೇ ಸಮಸ್ಯೆ ಬಗೆಹರಿಸುವ ಆತ್ಮಸ್ಥೈರ್ಯ ಬರಬೇಕು. ಆತ್ಮಹತ್ಯೆಗೆ ವಯಸ್ಸಿನ ಅಂತರವಿಲ್ಲ. ಬಡವ ಶ್ರೀಮಂತ ಎನ್ನದೆ ಎಲ್ಲಾ ವರ್ಗದಲ್ಲೂ ಆತ್ಮಹತ್ಯೆ ಪ್ರವೃತ್ತಿ ಕಾಣಬಹುದು ಎಂದು ಹೇಳಿದರು.

ADVERTISEMENT

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಹಡಪದ್ ಮಾತನಾಡಿ, ಪೋಷಕರು ಮಕ್ಕಳ ಆಸಕ್ತಿ ವಿಷಯಗಳಿಗೆ ಪ್ರೋತ್ಸಾಹ ನೀಡಬೇಕು. ಯಾವುದೇ ಒತ್ತಡ ಹೇರಬಾರದು. ಓದು ಮತ್ತು ಅಂಕಗಳಿಕೆಗೆ ಹೆಚ್ಚಿನ ಒತ್ತು ನೀಡಬಾರದು. ಮಕ್ಕಳಿಗೆ ಒತ್ತಡ ಹೆಚ್ಚಿದರೆ ಖಿನ್ನರಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.

ಸಾಹಿತಿ ವಿ.ಎನ್.ರಮೇಶ್ ಮಾತನಾಡಿ, ಜಾಗತಿಕವಾಗಿ ಯುವಕ ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲಿಲ್ಲ ಎಂಬುದು ಸೇರಿದಂತೆ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಯ ಹಾದಿ ಹಿಡಿಯುತ್ತಾರೆ. ದೇಶದಲ್ಲಿ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ 12 ಮಂದಿ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದಾರೆ. ಜಾಗತಿಕವಾಗಿ ಪ್ರತಿ ವರ್ಷ 8 ಲಕ್ಷಕ್ಕಿಂತ ಹೆಚ್ಚು ಜನ ಆತ್ಮಹತ್ಯೆಯಿಂದ ಮೃತ ಪಡುತ್ತಿದ್ದಾರೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.