ವಿಜಯಪುರ: ‘ಪರಿಸರ ಸಂರಕ್ಷಣೆ ಮಾಡುವುದು ಸೇರಿದಂತೆ ಜಲಮೂಲಗಳ ಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಹಬ್ಬದ ಅಂಗವಾಗಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪನೆ ಮಾಡಬೇಕು’ ಎಂದು ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಜನರಲ್ಲಿ ಮನವಿ ಮಾಡಿದ್ದಾರೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ಮೂರ್ತಿಗಳ ಮಾರಾಟಕ್ಕೆ ಈಗಾಗಲೇ ನಿಷೇಧವಿರುವ ಕಾರಣ ಎಲ್ಲಿಯೂ ಮಾರಾಟ ಮಾಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಖರೀದಿ ಮಾಡಿ ಪ್ರತಿಷ್ಠಾಪನೆ ಮಾಡದಂತೆಯೂ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಹಬ್ಬದ ಆಚರಣೆಯ ಅಂಗವಾಗಿ ಪಟಾಕಿ, ಸಿಡಿಮದ್ದು ಸಿಡಿಸಬಾರದು. ಪುರಸಭೆಯಿಂದ ನಿಗದಿ ಪಡಿಸಿರುವ ಸ್ಥಳಗಳಲ್ಲಿ ನಿಗದಿತ ಸಮಯದಲ್ಲಿ ಮಾತ್ರವೇ ವಿಸರ್ಜನೆ ಮಾಡಬೇಕು’ ಎಂದಿದ್ದಾರೆ.
‘ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವವರು ಪುರಸಭೆ, ಪೊಲೀಸ್ ಇಲಾಖೆ, ಬೆಸ್ಕಾಂ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸರ್ಕಾರದ ನಿಯಮಾವಳಿ ಉಲ್ಲಂಘನೆ ಮಾಡಿದರೆ ಅಂತಹವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.