ವಿಜಯಪುರ: ‘ಸರ್ಕಾರದ ಯೋಜನೆಗಳು ಸದ್ಬಳಕೆ ಮಾತ್ರವೇ ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಚನ್ನರಾಯಪಟ್ಟಣ ಹೋಬಳಿಯಲ್ಲಿ ₹ 1.38 ಲಕ್ಷ ವೆಚ್ಚದಲ್ಲಿ ಕೊಂಡೇನಹಳ್ಳಿ, ರಾಮನಹಳ್ಳಿ, ಭಟ್ರಮಾರೇನಹಳ್ಳಿ, ದೇವನಾಯಕನಹಳ್ಳಿ, ಗಂಗವಾರ, ಚೌಡಪ್ಪನಹಳ್ಳಿ, ಕಗ್ಗಲಹಳ್ಳಿ, ಹೊಸನಲ್ಲೂರು, ನಾಗೇನಹಳ್ಳಿ, ಸೋಮತ್ತನಹಳ್ಳಿ, ಬಿದಲಪುರ, ಬಾಲೇಪುರ ಗ್ರಾಮಗಳಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಸಿ.ಸಿ.ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಹಾಗೂ ರೆಡ್ಡಿಹಳ್ಳಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿ ಅವರು ಮಾತನಾಡಿದರು.
ಮೂಲಸೌಕರ್ಯಗಳಾದ ಸಿ.ಸಿ.ರಸ್ತೆ, ಚರಂಡಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಸ್ವಚ್ಛವಾದ ಹಳ್ಳಿಗಳ ನಿರ್ಮಾಣ, ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ.
‘ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಹಗಲಿರುಳು ಕೆಲಸ ಮಾಡುತ್ತಿದ್ದೇನೆ. ಮೈತ್ರಿ ಸರ್ಕಾರದ ನಂತರ ಆಡಳಿತಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ನಮ್ಮ ಕ್ಷೇತ್ರಗಳಿಗೆ ಮೀಸಲಿಟ್ಟಿದ್ದ ಅನುದಾನಗಳನ್ನು ಹಿಂಪಡೆದ ಕಾರಣ ಅಭಿವೃದ್ಧಿಗೆ ತೊಡಕಾಗಿತ್ತು. ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದೇನೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ₹ 200 ಕೋಟಿ ಅನುದಾನ ಕೊಟ್ಟಿದ್ದರು. ಈಗ ಅನುದಾನ ತರಬೇಕಾದರೆ ಪ್ರಯಾಸಪಡಬೇಕಾಗಿದೆ’ ಎಂದರು.
‘ಸರ್ಕಾರದ ಅನುದಾನದಲ್ಲಿ ಮಾಡುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಸ್ಥಳೀಯರು ಗಮನಹರಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಲೋಪವಾದರೆ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.
‘ಕ್ಷೇತ್ರದ ರೋಗಿಗಳಿಗೆ ಮುಖ್ಯಮಂತ್ರಿ ಪರಿಹಾರದ ನಿಧಿಯಿಂದ ಪರಿಹಾರ ಕೊಡಿಸುವ ಕೆಲಸದಲ್ಲಿ ನಿರತನಾಗಿದ್ದೇನೆ. ಈವರೆಗೂ ₹ 2 ಕೋಟಿಗೂ ಹೆಚ್ಚು ಪರಿಹಾರಧನ ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ವಿತರಣೆ ಮಾಡಲಾಗಿದೆ’ ಎಂದರು.
ತಾಲ್ಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಮಂಡಿಬೆಲೆ ರಾಜಣ್ಣ ಮಾತನಾಡಿ, ‘ಶಿಕ್ಷಣದಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ. ಯಾವುದೇ ಸಮುದಾಯ ಸಮಾಜದಲ್ಲಿ ಏಳಿಗೆ ಕಾಣಬೇಕಾದರೆ ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳುವುದರ ಜೊತೆಗೆ ಶೈಕ್ಷಣಿಕವಾಗಿ ಮುಂದುವರೆದಾಗ ಮಾತ್ರ ಸಾಧ್ಯ’ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿಯಲ್ಲಿ ಕೋಟ್ಯಾಂತರ ರೂಪಾಯಿಗಳ ಅನುದಾನಗಳನ್ನು ತಂದು ಅಭಿವೃದ್ಧಿ ಪಡಿಸಲಾಗಿದೆ. ಸರ್ಕಾರದಿಂದ ಮಂಜೂರಾಗಿರುವ ಯೋಜನೆಗಳಿಗೆ ತ್ವರಿತಗತಿಯಲ್ಲಿ ಹಣ ಬಿಡುಗಡೆಯಾಗುತ್ತಿಲ್ಲ ಆದ್ದರಿಂದ ಕಾಮಗಾರಿಗಳು ಕುಂಠಿತವಾಗುತ್ತಿವೆ’ ಎಂದರು.
ಮುಖಂಡ ಜಯರಾಮೇಗೌಡ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಮುನಿರಾಜು, ಜೆಡಿಎಸ್ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು, ಗಂಗವಾರ ಗ್ರಾಮ ಪಂಚಾಯಿತಿ ಸದಸ್ಯ ರಾಜಣ್ಣ, ರೆಡ್ಡಿಹಳ್ಳಿ ಮುನಿರಾಜು, ಮುನೇಗೌಡ, ಮಂಜುನಾಥ್, ಸ್ಥಳೀಯ ಮುಖಂಡರುಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.