ದೇವನಹಳ್ಳಿ:ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕು ಹಾಗೂ ಸಮುದಾಯಕ್ಕೆ ಹೆಚ್ಚು ಅನುದಾನ ನೀಡಬೇಕು ಎಂದು ಕರ್ನಾಟಕ ವಾಲ್ಮೀಕಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಪ್ರತಾಪ್ ಮದಕರಿ ಒತ್ತಾಯಿಸಿದರು.
ಇಲ್ಲಿನ ಹಳೇ ಬಸ್ ನಿಲ್ದಾಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ವಾಲ್ಮೀಕಿ ನಾಯಕ ಸಂಘದ ಸಹಯೋಗದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಾಲ್ಮೀಕಿ ರಚಿಸಿದ ರಾಮಾಯಣ ಓದಿದ ಗಾಂಧೀಜಿ ರಾಮ ರಾಜ್ಯದ ಕನಸು ಕಂಡಿದ್ದರು. ತ್ರೇತಾಯುಗದಲ್ಲಿಯೇ ಪುಪ್ಪಕ ವಿಮಾನದ ಪರಿಕಲ್ಪನೆ ಕೊಟ್ಟ ವಿಶ್ವಕ್ಕೆ ಮಾದರಿ ಮಹರ್ಷಿ ವಾಲ್ಮೀಕಿ ಎಂದು ದೂರಿದರು.
ವಾಲ್ಮೀಕಿ ಸಮುದಾಯಕ್ಕೆ ಜಯಂತಿ ಅವಶ್ಯ ಇಲ್ಲ. ರಜೆ ನಿಮಿತ್ತ ಅಧಿಕಾರಿಗಳು ಮನೆಯಲ್ಲಿರುತ್ತಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತದೆ. ಸ್ಥಳೀಯ ಶಾಸಕರು ಮುಖ್ಯಮಂತ್ರಿ ಮೇಲೆ ಒತ್ತಡ ತರಬೇಕು ಎಂದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಅನಂತಕುಮಾರಿ ಮಾತನಾಡಿ ನ್ಯಾಯ, ನೀತಿ, ಧರ್ಮ ಹೇಗೆ ಪಾಲನೆ ಮಾಡಬೇಕು ಎಂಬುದು ರಾಮಾಯಣ ಮಹಾಕಾವ್ಯ ಮಾದರಿಯಾಗಿದೆ. ಮಹಾಕಾವ್ಯಕ್ಕೆ ಮೌಲ್ಯಕಟ್ಟಲು ಸಾಧ್ಯವಿಲ್ಲ ಎಂದರು.
ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ತಾಲ್ಲೂಕು ಬರ ಪೀಡಿತ ಎಂದು ಘೊಷಣೆಯಾಗಿದ್ದರೂ ಮಹರ್ಷಿ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ ಎಂದರು.
ತಹಶೀಲ್ದಾರ್ ಎಂ.ರಾಜಣ್ಣ ಮಾತನಾಡಿ, ವಾಲ್ಮೀಕಿ ಸಮುದಾಯಕ್ಕೆ ಅಗತ್ಯವಿರುವ ಸೌಲಭ್ಯ ನೀಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ಡಾ.ನರಸಿಂಹಮೂರ್ತಿ, ಪುರಸಭೆ ಅಧ್ಯಕ್ಷ ಎಂ.ಮೂರ್ತಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ರಾಧಮ್ಮ ಮುನಿರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷಣ್ ಗೌಡ, ಉಪಾಧ್ಯಕ್ಷೆ ನಂದಿನಿ, ಪುರಸಭೆ ಉಪಾಧ್ಯಕ್ಷೆ ಆಶಾರಾಣಿ, ಎಪಿಎಂಸಿ ಅಧ್ಯಕ್ಷ ಕೆ.ವಿ.ಮಂಜುನಾಥ್, ಉಪಾಧ್ಯಕ್ಷ ಸುಧಾಕರ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಮಹೇಶ್, ವೆಂಕಟೇಶ್, ಚೈತ್ರಾ, ಅನ್ನಪೂರ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಹಾಪ್ಕಾಮ್ ಉಪಾಧ್ಯಕ್ಷ ಬಿ.ಮುನೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಜಿ.ಶ್ರೀರಾಮಯ್ಯ, ಪುರಸಭೆ ಸಭೆ ಸದಸ್ಯರಾದ ಬೇಕರಿ ಮಂಜುನಾಥ್, ರವೀಂದ್ರ, ಗಾಯಿತ್ರಿ, ರತ್ನಮ್ಮ ,ವಾಲ್ಮೀಕಿ ನಾಯಕ ಸಂಘ ತಾಲ್ಲೂಕು ಘಟಕ ಅಧ್ಯಕ್ಷ ಎನ್.ನಾಗೇಶ್ ಬಾಬು, ಉಪಾಧ್ಯಕ್ಷ ಕೆ.ರಾಜಕುಮಾರ್, ಪ್ರಧಾನ ಕಾರ್ಯದರ್ಶಿ ಎನ್.ರಾಮಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮುರುಡಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ದೇವಿ, ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ ಇದ್ದರು.
ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರನ್ನು ಸನ್ಮಾನಿಸಲಾಯಿತು. ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಿಂದ ಪ್ರಮುಖ ಬೀದಿಗಳಲ್ಲಿ ಅಲಂಕೃತ ವಾಲ್ಮೀಕಿ ಭಾವಚಿತ್ರ ಹೊತ್ತ ವಾಹನದೊಂದಿಗೆ ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ತರಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.