ದೇವನಹಳ್ಳಿ: ಮಹರ್ಷಿ ವಾಲ್ಮೀಕಿ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನ. ಅವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಪಟ್ಟಣದ ಗೋಕೆರೆ ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.
ವಾಲ್ಮೀಕಿ ವಿಶ್ವಕ್ಕೆ ಅತಿದೊಡ್ಡ ಕಾವ್ಯ ರಾಮಾಯಣ ಕೊಡುಗೆ ನೀಡಿದ್ದಾರೆ. ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡದ 104 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಪ್ರತಿಯೊಬ್ಬರೂ ವಾಲ್ಮೀಕಿ ಆದರ್ಶ ಜೀವನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.
ತಾಲ್ಲೂಕಿನ ವಾಲ್ಮೀಕಿ ಭವನದ ವಿವಿಧ ಕಾಮಗಾರಿಗಳಿಗೆ ₹1.91ಕೋಟಿ ಹಣ ಬಿಡುಗಡೆ ಆಗಿದೆ. ಭವನದ ಕಾಪೌಂಡ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿದೆ. ವರ್ಷದೊಳಗೆ ಕಾಮಗಾರಿ ಮುಕ್ತಾಯಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಸರ್ಮೋತೋಮುಖ ಅಭಿವೃದ್ಧಿ ಶ್ರಮಿಸಲಾಗುವುದು ಎಂದರು.
ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರು ಹಾಗೂ ಎಸ್ಎಸ್ಎಲ್ಸಿ, ಪಿಯು ಪರೀಕ್ಷೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಮಹರ್ಷಿ ವಾಲ್ಮೀಕಿ ಭವನದವರೆಗೆ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ನಡೆಯಿತು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ, ಬಯಪ ಅಧ್ಯಕ್ಷ ವಿ.ಶಾಂತಕುಮಾರ್, ದೇವನಹಳ್ಳಿ ತಾಲ್ಲೂಕು ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಸಿ.ಜಗನ್ನಾಥ್, ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ದೇವನಹಳ್ಳಿ ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ಜಿ.ರವೀಂದ್ರ, ತಹಶೀಲ್ದಾರ್ ಅನಿಲ್ ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಶ್ರೀನಾಥಗೌಡ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ವಾಲ್ಮೀಕಿ ಸಮುದಾಯದ ಅಧ್ಯಕ್ಷ ಎನ್.ನಾಗೇಶ್ ಬಾಬು, ಕಾರ್ಯದರ್ಶಿ ಎನ್.ರಾಮಚಂದ್ರಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಕಲ್ಯಾಣಾಧಿಕಾರಿ ಎಸ್.ಪಾಂಡುರಂಗ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.