ಆನೇಕಲ್: ‘ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ವಿದ್ಯಾಗಮ ಮೂಲಕ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಶಿಕ್ಷಕರು ಕಾರ್ಯಕ್ರಮ ಕೈಗೊಂಡಿದ್ದಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್.ರಾಮಮೂರ್ತಿ ತಿಳಿಸಿದರು.
ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಸಂದ್ರದ ಸಮೀಪ ಇಟ್ಟಿಗೆ ಕಾರ್ಖಾನೆಯ ವಲಸೆ ಕಾರ್ಮಿಕರ ಮಕ್ಕಳಿಗೆ ಟಿ-ಶರ್ಟ್, ಲೇಖನ ಸಾಮಗ್ರಿಗಳು ಮತ್ತು ಸ್ವಚ್ಛತಾ ಕಿಟ್ಗಳನ್ನು ವಿತರಿಸಿಅವರು ಮಾತನಾಡಿದರು.
‘ಇಟ್ಟಿಗೆ ಕಾರ್ಖಾನೆಗಳು, ಕೈಗಾರಿಕಾ ಪ್ರದೇಶಗಳು ಸೇರಿದಂತೆ ವಲಸೆ ಮಕ್ಕಳಿರುವ ಪ್ರದೇಶಗಳಲ್ಲಿ ಅವರು ವಾಸಿಸುತ್ತಿರುವ ಸ್ಥಳಗಳಲ್ಲಿಯೇ ವಿದ್ಯಾಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಗಳಿಗೆ ಸ್ಥಳೀಯರು, ಸಂಘ ಸಂಸ್ಥೆಗಳು, ಮಾಲೀಕರು ನೆರವು ನೀಡುವ ಮೂಲಕ ಕಾರ್ಯಕ್ರಮದ ಅನುಷ್ಠಾನಕ್ಕೆ ಸಹಕಾರ ನೀಡಬೇಕು’ ಎಂದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಪುಷ್ಪರಾಜು ಮಾತನಾಡಿ, ‘ಆನೇಕಲ್ ತಾಲ್ಲೂಕು ಗಡಿಭಾಗವಾಗಿದೆ. ಈ ಭಾಗದಲ್ಲಿ ತಮಿಳು ಮತ್ತು ತೆಲುಗು ಭಾಷಿಕರ ಪ್ರಭಾವವಿದೆ. ಇವುಗಳ ನಡುವೆ ಕನ್ನಡ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳು ಹೆಚ್ಚಿನ ಬೆಂಬಲ ನೀಡಿವೆ. ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಿ.ವಿ.ರೆಡ್ಡಿ ಅವರು ತಿಮ್ಮಸಂದ್ರ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳನ್ನು ಕರೆ ತರುವ ಸಲುವಾಗಿ ಉಚಿತ ವಾಹನದ ವ್ಯವಸ್ಥೆ ಮಾಡಿದ್ದರು. ಶಾಲೆಗಳು ಪ್ರಾರಂಭವಾಗದ್ದರಿಂದ ಇಟ್ಟಿಗೆ ಕಾರ್ಖಾನೆಯ ಬಳಿಯಲ್ಲಿಯೇ ವಿದ್ಯಾಗಮ ನಡೆಸಲು ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ’ ಎಂದರು.
ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಿ.ವಿ.ರೆಡ್ಡಿ, ದೈಹಿಕ ಶಿಕ್ಷಣಾಧಿಕಾರಿ ಡಿ.ಎನ್.ವೀರಭದ್ರಪ್ಪ, ಸಬ್ಮಂಗಲ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿ ಕೆ.ಚಂದ್ರಪ್ಪ, ಶಿಕ್ಷಕ ಕುಮಾರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.