
ವಿಜಯಪುರ (ದೇವನಹಳ್ಳಿ): ವಿಜಯಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ನಾಗರಾಜ್, ಉಪಾಧ್ಯಕ್ಷರಾಗಿ ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆರ್.ಚೇತನಾ ಘೋಷಣೆ ಮಾಡಿದರು.
ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ, ಎರಡು ಸ್ಥಾನಗಳಿಗೆ ಒಂದೊಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿದ್ದ ಕಾರಣ, ಇಬ್ಬರ ನಾಮಪತ್ರಗಳು ಕ್ರಮ ಬದ್ಧವಾಗಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಸಂಘಕ್ಕೆ ಜೆಡಿಎಸ್ ಬೆಂಬಲಿತರಾಗಿ ಆಯ್ಕೆಯಾಗಿರುವ ಹೆಚ್ಚಿನ ಸಂಖ್ಯೆಯ ನಿರ್ದೇಶಕರಲ್ಲಿ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಹಾಗೂ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕಾರಹಳ್ಳಿ ಮುನೇಗೌಡರ ಮಾರ್ಗದರ್ಶನದಲ್ಲಿ ಎಲ್ಲರಿಗೂ ಅವಕಾಶ ಸಿಗಬೇಕು ಎನ್ನುವ ಕಾರಣದಿಂದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳನ್ನು ವರ್ಷಕ್ಕೊಬ್ಬರಂತೆ ಹಂಚಿಕೆ ಮಾಡಲಾಗಿದೆ ಎಂದು ಜೆಡಿಎಸ್ ಟೌನ್ ಅಧ್ಯಕ್ಷ ಸಿ.ನಾರಾಯಣಸ್ವಾಮಿ ತಿಳಿಸಿದರು.
ಅಧ್ಯಕ್ಷ ಸ್ಥಾನ ಎಂಬುದು ಅಧಿಕಾರವಲ್ಲ, ಇದೊಂದು ಜವಾಬ್ದಾರಿಯಾಗಿದೆ. ಹಾಲಿನ ಉತ್ಪಾದನೆ ಹೆಚ್ಚಳ ಮಾಡುವುದರ ಜೊತೆಗೆ, ಉತ್ಪಾದಕರಿಗೆ ಬಮೂಲ್ ನಿಂದ ಸಿಗುವಂತಹ ಸೌಲಭ್ಯಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ನೂತನ ಅಧ್ಯಕ್ಷ ಕೆ.ನಾಗರಾಜ್ ತಿಳಿಸಿದರು.
ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಮಂಜುನಾಥ್, ಪುರಸಭೆ ಸದಸ್ಯರಾದ ರವಿ, ಎಂ.ಬೈರೇಗೌಡ, ಕೆ.ಮುನಿರಾಜು, ಮಹೇಶ್ ಕುಮಾರ್, ಚಿನ್ನಯ್ಯ, ಗುಂಡಣ್ಣ, ವೆಂಕಟೇಶ್, ವರದರಾಜು, ಮನೋಹರ್ ಸೇರಿದಂತೆ ಡೇರಿ ನಿರ್ದೇಶಕರು, ಹಾಲು ಉತ್ಪಾದಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.