ADVERTISEMENT

ಸೂರತ್, ರೇಪಿಯರ್ ಸೀರೆ ಮಾರಾಟಕ್ಕೆ ಕಡಿವಾಣ ಹಾಕಿ: ನೇಕಾರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 2:07 IST
Last Updated 28 ನವೆಂಬರ್ 2025, 2:07 IST
​ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ವೃತ್ತದಲ್ಲಿ ಗುರುವಾರ ನೇಕಾರರು ಪ್ರತಿಭಟನ ಸಭೆ ನಡೆಸಿದರು
​ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ವೃತ್ತದಲ್ಲಿ ಗುರುವಾರ ನೇಕಾರರು ಪ್ರತಿಭಟನ ಸಭೆ ನಡೆಸಿದರು   

ದೊಡ್ಡಬಳ್ಳಾಪುರ: ಸೂರತ್ ಹಾಗೂ ಇತರೆಡೆ ರೇಪಿಯರ್ ಮಗ್ಗಗಳಲ್ಲಿ ನೇಯ್ದ ಸೀರೆಗಳನ್ನು ಇಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ನೇಕಾರರ ಹಿತರಕ್ಷಣಾ ಸಮಿತಿ, ದೊಡ್ಡಬಳ್ಳಾಪುರ ಟೆಕ್ಸ್‌ ಟೈಲ್ಸ್ ವೀವರ್ಸ್ ಅಸೋಸಿಯೇಶನ್, ನೇಕಾರರ ಹೋರಾಟ ಸಮಿತಿ, ವಿವಿಧ ನೇಕಾರ ಸಂಘಟನೆಗಳ ನೇತೃತ್ವದಲ್ಲಿ ನೇಕಾರರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸೂರತ್ ಹಾಗೂ ಇತರೆಡೆ ರೇಪಿಯರ್ ಮಗ್ಗಗಳಲ್ಲಿ ನೇಯ್ದ ಸೀರೆಗಳನ್ನು ಇಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ದೊಡ್ಡಬಳ್ಳಾಪುರದ ನೇಕಾರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೇಕಾರರ ಹಿತರಕ್ಷಣೆಗಾಗಿ ವಿದ್ಯುತ್ ಮಗ್ಗಗಳ ಮೀಸಲು ಕಾಯ್ದೆ ರೂಪಿಸಬೇಕು. ಹೊರ ರಾಜ್ಯಗಳಿಂದ ಬರುವ ಸೀರೆ ಮಾರಾಟ ತಡೆಯಬೇಕು. ನೇಯ್ಗೆ ಉದ್ಯಮ ಬಿಕ್ಕಟ್ಟಿಗೆ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಪ್ರತಿಭಟನನಿರತರು ಆಗ್ರಹಿಸಿದರು.

ರೇಪಿಯರ್ ಮತ್ತು ಸೂರತ್‌ನಿಂದ ತಂದ ಸೀರೆಗಳನ್ನು ಇಲ್ಲಿಗೆ ತಂದು ಮಾರುವುದನ್ನು ಈ ಕೂಡಲೇ ನಿಲ್ಲಿಸಬೇಕು. ರೇಪಿಯರ್ ಮಗ್ಗಗಳಲ್ಲಿ ಇಲ್ಲಿನ ಮಾದರಿಯ ಸೀರೆಗಳನ್ನು ನೇಯದಂತೆ ಸರ್ಕಾರ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ADVERTISEMENT

ದೊಡ್ಡಬಳ್ಳಾಪುರದಲ್ಲಿ 25 ಸಾವಿರ ಮಗ್ಗಗಳಿದ್ದು, ಗುಡಿ ಕೈಗಾರಿಕೆಯಾಗಿರುವ ನೇಕಾರಿಕೆಯನ್ನು ವಿವಿಧ ಹಂತಗಳ ನೇಕಾರರು ಹಾಗೂ ಕುಟುಂಬ ಸೇರಿ ಒಂದು ಲಕ್ಷ ಮಂದಿ ಅವಲಂಬಿಸಿದ್ದಾರೆ. ನಮ್ಮ ನೇಕಾರಿಕೆಯಲ್ಲಿ ನಾವು ಉತ್ಪಾದನೆ ಮಾಡುವ ಸೀರೆಗಳನ್ನು ಸೂರತ್‌ನಲ್ಲಿರುವ ಆಧುನಿಕ ತಂತ್ರಜ್ಞಾನದ ರೇಪಿಯರ್ ವಿರ್ಜೆಟ್ ಮಗ್ಗಗಳಲ್ಲಿ ಉತ್ಪಾದನೆ ಮಾಡುತ್ತಿದ್ದು, ಇಲ್ಲಿಗೆ ತಂದು ನಾವು ಮಾರುತ್ತಿರುವ ಬೆಲೆಗಿಂತ ಅರ್ಧ ಬೆಲೆಗೆ ಮಾರಾಟ ಮಾಡಿ ನೇಕಾರಿಕೆ ಉದ್ಯಮವನ್ನು ಹಾಳು ಮಾಡಲಾಗುತ್ತಿದೆ. ಸರ್ಕಾರ ಈ ಬಗ್ಗೆ ಕಾಯ್ದೆ ರೂಪಿಸಿ ನೇಕಾರರ ಹಿತ ಕಾಪಾಡಬೇಕೆಂದು ನೇಕಾರರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಪಿ.ಎ.ವೆಂಕಟೇಶ್ ಒತ್ತಾಯಿಸಿದರು.

ನೇಕಾರರು ಭಾವನಾತ್ಮಕವಾಗಿರದೇ ವಾಸ್ತವ ಸಂಗತಿ ಅರ್ಥ ಮಾಡಿಕೊಳ್ಳಬೇಕಿದೆ. ಇದು ಸರ್ಕಾರದ ಕಾಯ್ದೆಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ನಿರಂತರ ಹೋರಾಟ ಹಾಗೂ ಒತ್ತಾಯದ ಮೂಲಕ ಬಗೆಹರಿಸಿಕೊಳ್ಳಬೇಕಿದೆ ಎಂದು ನೇಕಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್ ಹೇಳಿದರು.

ನೇಕಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಂತೆ ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ, ಕರ್ನಾಟಕ ರಾಜ್ಯ ಕೈ ಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ್, ಜಿಲ್ಲಾ ಉಪನಿರ್ದೇಶಕ ಸುರೇಶ್ ಅವರಿಗೆ ನೇಕಾರರು ಮನವಿ ಸಲ್ಲಿಸಲಾಯಿತು.

ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಟೆಕ್ಸ್‌ ಟೈಲ್ಸ್‌ ವೀವರ್ಸ್ ಅಸೋಸಿಯೇಶನ್‌ ಮುಖಂಡ ಆರ್.ಎಸ್.ಶ್ರೀನಿವಾಸ್, ವಿ.ನರಸಿಂಹಮೂರ್ತಿ, ಡಿ.ಆರ್.ದ್ರುವಕುಮಾರ್ ಇದ್ದರು.

ನೇಯ್ಗೆ ಉದ್ಯಮದ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಪರಿಹಾರ ಸೂಚಿಸಬೇಕಿದ್ದು ಅಧಿಕಾರಿಗಳು ಹಾಗೂ ಸರ್ಕಾರ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ
ಟಿ.ವೆಂಕಟರಮಣಯ್ ಮಾಜಿ ಶಾಸಕ
ಕಾಯ್ದೆ ರೂಪಿಸಲು ಬದ್ಧ
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಧೀರಜ್ ಮುನಿರಾಜು ದೊಡ್ಡಬಳ್ಳಾಪುರದ ಸೀರೆಗಳನ್ನು ಬೃಹತ್‌ ಮಿಲ್‌ಗಳಲ್ಲಿ ತಯಾರು ಮಾಡಲಾಗುತ್ತಿರುವುದು ನೇಕಾರರಿಗೆ ಸಂಕಷ್ಟವಾಗಿದೆ. ಇದಕ್ಕೆ ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ಉತ್ಪನ್ನಗಳನ್ನು ತಯಾರಿಸಬಾರದು ಎಂದು 2006ರ ಕಾಯ್ದೆಯಲ್ಲಿ ಇರುವ ಅಂಶಗಳ ಆಧಾರದ ಮೇಲೆ ಈ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದು ಕಾಯ್ದೆ ರೂಪಿಸಲು ಮನವಿ ಮಾಡಲಾಗುವುದು. ನೇಕಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಖರೀದಿ ಮಾರುಕಟ್ಟೆ: ಡಿ.1ಕ್ಕೆ ಸಂವಾದ
ಮುಕ್ತ ವ್ಯಾಪರ ಒಪ್ಪಂದ ಜಾಗತೀಕರಣದ ಪ್ರಭಾವದಿಂದ ನೇಕಾರರು ಮಾರಾಟ ಮಾಡುವ ಸೀರೆಗಳಿಗೆ ಮಾರುಕಟ್ಟೆ ಇಲ್ಲದಂತಾಗಿ ನೇಕಾರರು ಸಂಕಷ್ಟದಲ್ಲಿದ್ದಾರೆ. ಈ ಹಿಂದೆ ನೇಕಾರರ ಹೋರಾಟದ ಫಲವಾಗಿ ರಾಜ್ಯ ಉಚಿತ ವಿದ್ಯುತ್ ಸೌಲಭ್ಯಗಳು ಸರ್ಕಾರದಿಂದ ದೊರೆತಿತ್ತು. ಈಗ ಸರ್ಕಾರ ಕಚ್ಚಾ ವಸ್ತುಗಳ ಬೆಲೆ ಕಡಿಮೆ ಮಾಡುವುದರೊಂದಿಗೆ ನೇಕಾರರು ಉತ್ಪಾದಿಸಿದ ಬಟ್ಟೆಗಳನ್ನು ಖರೀದಿಸುವ ವ್ಯವಸ್ಥೆ ಮಾಡಬೇಕಿದೆ. ಈ ಕುರಿತು ಡಿ.1 ರಂದು ಸಂವಾದ ಏರ್ಪಡಿಸಲಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು ತಿಳಿಸಿದರು. ಡಿ.4ಕ್ಕೆ ನಿಯೋಗ ಭೇಟಿ: ಇಲ್ಲಿನ ನೇಕಾರರ ಸಮಸ್ಯೆಗಳ ಕುರಿತು ಚರ್ಚಿಸಲು ಜನಪ್ರತಿನಿಧಿಗಳ ಹಾಗೂ ನೇಕಾರರ ಸಂಘಟನೆಗಳ ಮುಖಂಡರ ನಿಯೋಗವನ್ನು ಭೇಟಿ ಮಾಡಲು ಜವಳಿ ಸಚಿವರು ಡಿ.4 ರಂದು ಸಮಯ ನಿಗದಿ ಮಾಡಿದ್ದಾರೆ.