ದೊಡ್ಡಬಳ್ಳಾಪುರ: ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಲು ನಗರದಿಂದ ಕಾನ್ನಡಿಗೆಯಲ್ಲಿ ಹೊರಟಿದ್ದ ನೂರಾರು ಜನ ನೇಕಾರರನ್ನು ರಘುನಾಥಪುರದಲ್ಲಿ ಪೊಲೀಸರು ತಡೆದಿದ್ದಾರೆ.
ನೇಕಾರರ ಹಿತರಕ್ಷಣಾ ಸಮಿತಿ ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ಸೋಮವಾರ ಬೆಳಿಗ್ಗೆಯೆ ಬಂಧಿಸಲಾಗಿತ್ತು. ಆದರೆ ನೂರಾರು ಸಂಖ್ಯೆಯಲ್ಲಿ ನೇಕಾರರು ಜಿಲ್ಲಾಧಿಕಾರಿಗಳ ಕಚೇರಿ ಕಡೆಗೆ ಹೊರಟಿದ್ದರಿಂದ ಮುಖಂಡರನ್ನು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಅವಕಾಶ ಕೊಡಿಸುವುದಾಗಿ ಪೊಲೀಸರು ಕರೆತಂದರು.
ಆದರೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ನೇಕಾರರು ಮುಖಂಡರು ನಮ್ಮೊಂದಿಗೆ ಇರಬೇಕು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.ನೇಕಾರರನ್ನು ಜಿಲ್ಲಾಧಿಕಾರಿಗಳ ಕಚೇರಿ ಬಳಿಗೆ ಹೋಗದಂತೆ ರಘುನಾಥಪುರ ಸಮೀಪದಲ್ಲೇ ತಡೆಯಲಾಗಿದೆ. ಜಿಲ್ಲಾಧಿಕಾರಿಗಳು ಬರುವವರಿಗೂ ಇಲ್ಲಿಂದ ತೆರಳುವುದಿಲ್ಲ ಎಂದು ನೇಕಾರರು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಏರ್ಪಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.