ADVERTISEMENT

ದೇವನಹಳ್ಳಿ | ₹42 ಲಕ್ಷ ಮೌಲ್ಯದ ವಸ್ತು ಜಪ್ತಿ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಚಿನ್ನಾಭರಣ, ಕುಕ್ಕರ್‌ ವಶ: ಜಿಲ್ಲಾಧಿಕಾರಿ ಲತಾ ಮಾಹಿತಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 6:35 IST
Last Updated 26 ಮಾರ್ಚ್ 2023, 6:35 IST
ನೆಲಮಂಗಲ ತಾಲ್ಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿರುವ ವಸ್ತುಗಳು
ನೆಲಮಂಗಲ ತಾಲ್ಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿರುವ ವಸ್ತುಗಳು   

ದೇವನಹಳ್ಳಿ: ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚೆಕ್‌ಪೋಸ್ಟ್‌ ಮತ್ತು ಇತರೆಡೆಗಳಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ ನಗದು ಮತ್ತು ವಸ್ತುಗಳ ಸೇರಿದಂತೆ ₹42.82 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಆರ್‌.ಲತಾ ತಿಳಿಸಿದರು.

₹20 ಲಕ್ಷ ನಗದು, ಸುಮಾರು ₹20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆ.ಜಿ.ಬೆಳ್ಳಿ, ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು ₹42,83,320 ಮೌಲ್ಯದ ವಸ್ತುಗಳನ್ನು ಶುಕ್ರವಾರ ನೆಲಮಂಗಲದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ₹1,66,980 ಮೌಲ್ಯದ 347 ಲೀಟರ್ ಅಕ್ರಮ ಮದ್ಯ, ₹3 ಲಕ್ಷಕ್ಕೂ ಅಧಿಕ ಮೌಲ್ಯದ 1.3 ಕೆ.ಜಿ. ಡ್ರಗ್ಸ್, ₹3 ಲಕ್ಷಕ್ಕೂ ಅಧಿಕ ಮೌಲ್ಯದ 536 ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ನೆಲಮಂಗಲ ತಾಲ್ಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ ₹20 ಲಕ್ಷ ನಗದು, ಬೆಳ್ಳಿ, 410 ಸೀರೆಗಳು, 439 ಚೂಡಿದಾರ್‌, ಪ್ಯಾಂಟ್‌, ಶಾರ್ಟ್‌ ಸೇರಿದಂತೆ ಬಟ್ಟೆಗಳನ್ನು ವಶಪಡಿಸಿಕೊಳ್ಲಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ನೆಲಮಂಗಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದರು.

ಅನಧಿಕೃತ ಬ್ಯಾನರ್, ಪೋಸ್ಟರ್ ತೆರವು: ಜಿಲ್ಲಾಡಳಿತ ಕಳೆದ ಮಾರ್ಚ್‌ 13 ರಿಂದ ಇಲ್ಲಿಯವರೆಗೆ ಜಿಲ್ಲೆಯ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ 31 ಸಾವಿರಕ್ಕೂ ಅಧಿಕ ಬ್ಯಾನರ್, ಪೋಸ್ಟರ್, ಗೋಡೆ ಬರಹ ಹಾಗೂ ಇತರೆ ಪ್ರಚಾರ ಸಾಮಗ್ರಿ ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಮಾದರಿ ನೀತಿ ಸಂಹಿತೆಯ ಜಿಲ್ಲಾ ನೋಡಲ್ ಅಧಿಕಾರಿಗಳೂ ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ ಎಂ.ತಿರ್ಲಾಪುರ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.